ಕರ್ನಾಟಕ ಹವಾಮಾನ ಜೂನ್ 3: ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂಗಾರು ಅಬ್ಬರ; ಇಂದು 17 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
Karnataka Weather Today: ಬೆಂಗಳೂರಿನಲ್ಲಿ ಜೂನ್ 2ರ ಭಾನುವಾರ ಭಾರಿ ಅಂದರೆ ಭಾರಿ ಮಳೆಯಾಗಿದ್ದು, ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿತು. ಜೂನ್ 3ರ ಸೋಮವಾರ ರಾಜಧಾನಿ ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಮುನ್ಸೂಚನೆ ಇದೆ.

ಬೆಂಗಳೂರು: ನಿರೀಕ್ಷೆಯಂತೆ ಜೂನ್ ತಿಂಗಳ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು (Monsoon 2024) ಪ್ರವೇಶಿಸಿದ್ದು, ಕಳೆದ ಎರಡ್ಮೂರು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ (Karnataka Rain). ಅದರಲ್ಲೂ ನಿನ್ನೆ (ಜೂನ್ 2, ಭಾನುವಾರ) ಉದ್ಯಾನ ನಗರಿ ಬೆಂಗಳೂರಿನಲ್ಲಿ ಕುಂಭದ್ರೋಣ ಮಳೆಯಾಗಿದ್ದು, ರಸ್ತೆಗಳಲ್ಲಿ ಮಳೆ ನೀರು ಪ್ರವಾಹದಂತೆ ಹರಿದಿದೆ. ಇದು ವಾಹನ ಸವಾರರಿಗೆ ಭಾರಿ ಸಂಕಷ್ಟಕ್ಕೆ ಕಾರಣವಾಯಿತು. ಭಾರಿ ಮಳೆಯ ಪರಿಣಾಮ ಹೆಬ್ಬಾಳ ಸೇರಿದಂತೆ ಹಲವೆಡೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಇನ್ನೂ ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವೊಂದು ಕಡೆಗಳಲ್ಲಿ ಸೋಮವಾರ (ಜೂನ್ 2) ಭರ್ಜರಿ ಮಳೆಯಾಗಿದೆ (Karnataka Weather Today).
ಬೆಂಗಳೂರು ಹವಾಮಾನ ಕೇಂದ್ರದ ವರದಿಯ ಪ್ರಕಾರ ಸೋಮವಾರ ಮಂಡ್ಯ ಜಿಲ್ಲೆಯ ಹೊನಕೆರೆಯಲ್ಲಿ ಗರಿಷ್ಠ ಮಳೆಯಾಗಿದೆ. ಇಲ್ಲಿ ಬರೋಬ್ಬರಿ 8 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹೇಳಿದೆ. ಉಳಿದಂತೆ ಬೆಂಗಳೂರಿನ ಜಿಕೆವಿಕೆ, ಕೊಪ್ಪಳದ ಗಂಗಾವತಿಯಲ್ಲಿ ತಲಾ 6 ಸೆಂಟಿ ಮೀಟರ್, ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ತುಮಕೂರಿನ ಮಿಡಿಗೇಶಿಯಲ್ಲಿ ತಲಾ 5 ಸೆಂಟಿ ಮೀಟರ್, ಚಾಮರಾಜನಗರ, ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ಸೆಂಟಿ ಮೀಟರ್ ಮಳೆಯಾಗಿದೆ.
ಜೂನ್ 3ರ ಸೋಮವಾರ ಎಲ್ಲೆಲ್ಲಿ ಮಳೆಯಾಗುತ್ತೆ?
ಜೂನ್ 3ರ ಸೋಮವಾರದಿಂದ ಜೂನ್ 9ರ ಭಾನುವಾರದ ವರೆಗೆ ಮುಂದಿನ 7 ದಿನಗಳ ವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು (ಜೂನ್ 3, ಸೋಮವಾರ) ಕರ್ನಾಟಕದ ಎಲ್ಲೆಲ್ಲಿ ಮಳೆಯಾಗಲಿದೆ ಅನ್ನೋದನ್ನು ನೋಡುವುದಾದರೆ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ ಜಿಲ್ಲೆಗಳ ಕೆಲವೊಂದು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 4ರ ಮಂಗಳವಾರ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆಯಾಗುತ್ತಿರುವುದರಿಂದ ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡನಲ್ಲಿ ಉಷ್ಣಾಂಶ ಕಡಿಮೆಯಾಗಿದೆ. ಅದರಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 40.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ?
ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಅಥವಾ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸತತವಾಗಿ ಮಳೆಯಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಬಿಸಿ ಕಡಿಮೆಯಾಗಿದ್ದು, ತುಂಬಾ ಕೂಲ್ ಆಗಿದೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
