ಕರ್ನಾಟಕ ಹವಾಮಾನ ಮಾರ್ಚ್ 11: ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಳ; ದಾವಣಗೆರೆಯಲ್ಲಿ ಕಡಿಮೆ ಬಿಸಿ
Karnataka Weather Today: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸುಡು ಬಿಸಿಲು ಮತ್ತಷ್ಟು ಹೆಚ್ಚಳವಾಗುತ್ತಿದ್ದು, ಜನ ಹೈರಾಣವಾಗಿದ್ದಾರೆ. ಬೆಂಗಳೂರಿನಲ್ಲಿ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬಿಸಿಲು ಏರಿಕೆಯಾಗುತ್ತಲೇ ಇದೆ (Karnataka Weather March 11). ಇಂದು (ಮಾರ್ಚ್ 11, ಸೋಮವಾರ) ಕೂಡ ಕೆಲವೊಂದು ಕಡೆ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗಿರಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ತಾಪಮಾಪ ಜಾಸ್ತಿ ಇರಲಿದೆ. ಈಗಾಗಲೇ ಜನರು ಬಿಸಿಯ ಝಳಕ್ಕೆ ಬಸವಳಿದಿದ್ದು, ಬೆಳಗ್ಗಿನ ಸಮಯದಲ್ಲೂ ಚಳಿಯ ವಾತಾವರಣವಿಲ್ಲ, ಬಿಸಿ ಇರುತ್ತದೆ. 10 ಗಂಟೆಯ ನಂತರ ಸುಡು ಬಿಸಿಲು ಇರುತ್ತದೆ ಹೀಗಾಗಿ ಮನೆಯಿಂದ ಹೊರಬಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜನ ಅಳಲು ತೋಡಿಕೊಳ್ಳುತ್ತಿದ್ದಾರೆ. ಬಿಸಿಯ ಜೊತೆಗೆ ಹಲವು ಕಡೆಗಳಲ್ಲಿ ಕುಡಿಯುವ ನೀರನ ಸಮಸ್ಯೆ ಎದುರಾಗಿದೆ. ಜೊತೆಗೆ ಕೃಷಿ ಚಟುವಟಿಕೆಗಳಿಗೆ ನೀರು ಕಡಿಮೆಯಾಗುತ್ತಿರುವುದು ರೈತರನ್ನು ಕಂಗಾಲಾಗಿಸಿದೆ.
ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. ಅಂದರೆ 2.1 ಡಿಗ್ರಿ ಸೆಲ್ಸಿಯಸ್ನಿಂದ 4.0 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳ ಕಂಡಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 38.6 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದ್ದರೆ, ಕಡಿಮೆ ಉಷ್ಣಾಂಶ ದಾವಣಗೆರೆಯಲ್ಲಿ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಜ್ಯದ ಹಲವು ತಾಲೂಕುಗಳಲ್ಲಿ ಬರಗಾಲವಿದೆ. ಪ್ರಮುಖವಾಗಿ ನೀರಿಲ್ಲದೆ ಜನರು ಸಾಕಷ್ಟು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪಶುಗಳಿಗೆ ಮೇವು ಒದಗಿಸುವುದು ದೊಡ್ಡ ಸವಾಲಾಗಿದೆ. ಮೇವು ಕೊರತೆಯಿಂದ ಹೆಚ್ಚಿನ ರಾಸುಗಳನ್ನು ಹೊಂದಿರುವವರು ಮಾರಾಟಕ್ಕೆ ಮುಂದಾಗಿದ್ದಾರೆ. ಇನ್ನ ನೀರು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿಯ ಪ್ರಮಾಣವನ್ನು ತಗ್ಗಿಸುತ್ತಿದ್ದಾರೆ. 5 ಎಕರೆಯಲ್ಲಿ ಬೆಳೆ ಬೆಳೆಯುತ್ತಿದ್ದರು, 2 ರಿಂದ 3 ಎಕರೆಗೆ ಸಮೀತವಾಗುತ್ತಿದ್ದಾರೆ.
ಮಾರ್ಚ್ 11ರ ಸೋಮವಾರ ಬೆಂಗಳೂರು ಹವಾಮಾನ
ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಬಿಸಿ ಏರಿಕೆಯಾಗುತ್ತಿದೆ. ಇವತ್ತು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮಾಹಿತಿ ಇದೆ. ಬೆಳಗ್ಗೆಯಿಂದ ಆಕಾಶ ನಿರ್ಮಲವಾಗಿದೆ. ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ.
(This copy first appeared in Hindustan Times Kannada website. To read more like this please logon to kannada.hindustantimes.com )

ವಿಭಾಗ