ಕರ್ನಾಟಕ ಹವಾಮಾನ ಮಾರ್ಚ್ 15: ಉತ್ತರ, ದಕ್ಷಿಣ ಒಳನಾಡಿನಲ್ಲಿ ಹೆಚ್ಚುತ್ತಿರುವ ಬಿಸಿ; ಕಲಬುರಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು
Karnataka Weather Today: ಕರ್ನಾಟಕದಲ್ಲಿ ಬಿಸಿ ಹೆಚ್ಚಾಗುತ್ತಿರುವ ನಡುವೆಯೇ ಕಲಬುರಗಿಯಲ್ಲಿ ದಾಖಲೆಯ 40.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇತರೆ ಪ್ರದೇಶದ ವಾತಾವರಣದ ವಿವರ ಇಲ್ಲಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ ಎಂದು ಹವಾಮಾನ (Karnataka Weather Update) ಕೇಂದ್ರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳ ಹವಾಮಾನ ವರದಿ ಪ್ರಕಾರ, ಉತ್ತರ ಒಳನಾಡಿನ ಹಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಕಲಬುರಗಿ ಹಾಗೂ ಸುತ್ತಮುತಲ್ಲಿನ ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ವಿಜಯಪುರ ಹಾಗೂ ರಾಯಚೂರಿನಲ್ಲಿ ಬಿಸಿ ಹೆಚ್ಚಾಗಿದೆ.
ಇಂದು (ಮಾರ್ಚ್ 15, ಶುಕ್ರವಾರ) ಮುಂಜಾನೆ ಕೆಲವೊಂದು ಕಡೆ ಸ್ವಲ್ಪ ಚಳಿಯ ವಾತಾವರಣ ಇಬ್ಬರು ಬೆಳಗ್ಗೆ 10 ಗಂಟೆಯ ನಂತರ ಬಿಸಿಲು, ಬಿಸಿಗಾಳಿ ಹೆಚ್ಚಾಗುತ್ತಿದ್ದು, ಇದರಿಂದ ರಾಜ್ಯದ ಜನರು ಕಂಗಾಲಾಗುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ನೀರಿನ ಸಮಸ್ಯೆಯ ಜೊತೆಗೆ ಬಿಸಿಯ ವಾತಾವಾರಣವಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕೆರೆಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಬೋರ್ವೆಲ್ನಲ್ಲಿ ನೀರಿನ ಸಮಸ್ಯೆಯಿಂದ ಬೆಳೆಗಳು ಒಣಗುತ್ತಿವೆ. ಪಶುಗಳ ಮೇವಿಗೂ ಸಮಸ್ಯೆಯಾಗುತ್ತಿದೆ.
ಕರವಾಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ವಾತಾವರಣದಲ್ಲಿ ಬದಲಾವಣೆ ಕಾಣಬಹುದು. ಉಷ್ಣಾಂಶದಲ್ಲಿ ಸಮಾನ್ಯಕ್ಕಿಂತ ಗಮನಾರ್ಹ ಬದಲಾವಣೆಯನ್ನು ಕಾಣಬಹುದು. ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಅಂದರೆ 1.6 ಡಿಗ್ರಿ ಸೆಲ್ಸಿಯಸ್ ನಿಂದ 3.0 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಕಲಬುರಗಿಯಲ್ಲಿ ದಾಖಲೆಯ ಗರಿಷ್ಠ 40.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತಿ ಕಡಿಮೆ 17 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ.
(This copy first appeared in Hindustan Times Kannada website. To read more like this please logon to kannada.hindustantimes.com )

ವಿಭಾಗ