ಬೆಂಗಳೂರು, ದಕ್ಷಿಣ ಕನ್ನಡ, ಮೈಸೂರು, ಕೊಡಗು ಸಹಿತ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು, ದಕ್ಷಿಣ ಕನ್ನಡ, ಮೈಸೂರು, ಕೊಡಗು ಸಹಿತ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ

ಬೆಂಗಳೂರು, ದಕ್ಷಿಣ ಕನ್ನಡ, ಮೈಸೂರು, ಕೊಡಗು ಸಹಿತ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಶುಕ್ರವಾರವೂ ಹಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಕೆಲವು ಕಡೆ ಗುಡುಗು ಕೂಡ ಇರಬಹುದು. ಇದಲ್ಲದೇ ಮುಂದಿನ ವಾರವೂ ಮಳೆಯ ಮುನ್ಸೂಚನೆಯಿದೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಶುಕ್ರವಾರವೂ ಮಳೆಯಾಗುವ ಸೂಚನೆಗಳಿವೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಶುಕ್ರವಾರವೂ ಮಳೆಯಾಗುವ ಸೂಚನೆಗಳಿವೆ.

ಕರ್ನಾಟಕದ ಬೆಂಗಳೂರು, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಹಾಸನ ಸಹಿತ ಹಲವು ಜಿಲ್ಲೆಗಳಲ್ಲಿ ಶುಕ್ರವಾರವೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಮಳೆಯೂ ಆಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಬಿರುಬಿಸಿಲು ಎದುರಿಸುತ್ತಿರುವ ಉತ್ತರ ಕರ್ನಾಟಕದ ಯಾದಗಿರಿ, ಬೀದರ್‌, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಹಗುರ ಮಳೆ ಶುಕ್ರವಾರ ಆಗುವ ಸಾಧ್ಯತೆಗಳಿವೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಸೂಚನೆಯಿದ್ದರೆ, ಉಳಿದೆಡೆ ಒಣ ಹವೆಯ ವಾತಾವರಣ ಇರಲಿದೆ. ಅಲ್ಲಲ್ಲಿ ಮಳೆಯಾಗುತ್ತಿದ್ದರೂ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ಪ್ರಮಾಣವೂ ಏರಿಕೆಯಾಗಿದೆ. ಇದರ ನಡುವೆಯೇ ಮುಂದಿನ ವಾರವೂ ಕರ್ನಾಟಕದಲ್ಲಿ ಮಳೆಯಾಗುವ ಸೂಚನೆಗಳಿವೆ.

ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ ಗುಡುಗು ಸಹಿತ ಆಗಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ. ಭಾನುವಾರದಿಂದ ಸತತ ನಾಲ್ಕು ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಕರ್ನಾಟಕದ ಯಾದಗಿರಿ, ಬೀದರ್‌, ಕಲಬುರಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಶುಕ್ರವಾ ಮಳೆಯಾಗಬಹುದು. ಗುಡುಗು ಕೂಡ ಇರಲಿದೆ. ಗಾಳಿಯ ವೇಗವೂ ಹೆಚ್ಚುವ ಸೂಚನೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಶನಿವಾರ ಹಾಗೂ ಭಾನುವಾರವೂ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.

ದಕ್ಷಿಣ ಕರ್ನಾಟಕದ ಕೊಡಗು, ಮೈಸೂರು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಗುಡುಗು ಕೂಡ ಇರಲಿದೆ. ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆ ಶುಕ್ರವಾರ ಆಗಲಿದೆ.

ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ ಸಹಿತ ಏಪ್ರಿಲ್‌ 23ರವರೆಗೂ ಈ ಭಾಗದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಕರ್ನಾಟಕದ ನಾನಾ ಭಾಗಗಳಲ್ಲಿ ಬುಧವಾರ ಹಾಗೂ ಗುರುವಾರವೂ ಮಳೆಯಾಗಿದೆ. ಅತ್ಯಧಿಕ ಮಳೆಯಾಗಿರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಮಂಡ್ಯ ಜಿಲ್ಲೆಯ ಬೆಳ್ಳೂರಿನಲ್ಲಿ. ಮೈಸೂರು ಜಿಲ್ಲೆ ಹುಣಸೂರು, ಸರಗೂರು, ಮಂಡ್ಯ ಜಲ್ಲೆಯ ಮದ್ದೂರು, ಕೃಷ್ಣರಾಜಪೇಟೆ, ನಾಗಮಂಗಲ, ಚಿತ್ರದುರ್ಗ ಬಿ ದುರ್ಗ, ಮೊಳಕಾಲ್ಮೂರು, ಹೊಸದುರ್ಗ, ಬೆಂಗಳೂರು ನಗರ, ಕೋಲಾರದ ರಾಯಲ್ಪಾಡುವಿನಲ್ಲಿ ಮಳೆಯಾಗಿದೆ. ಗದಗದ ಲಕ್ಷ್ಮೇಶ್ವರ, ಶಿರಹಟ್ಟಿ, ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲೂ ಮಳೆಯಾದ ವರದಿಯಾಗಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಹಾಗೂ ಶನಿವಾರದಂದು ಗಾಳಿ, ಮಳೆ ಇರಲಿದೆ. ಗುಡುಗು ಕೂಡ ಕಾಣಿಸಿಕೊಳ್ಳಲಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಬಲವಾದ ಮೇಲ್ಮೈ ಗಾಳಿಯೊಂದಿಗೆ ಹಗುರ ಮಳೆ ಗುಡುಗು ಸಹಿತ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಹಲವು ಭಾಗಗಳಲ್ಲಿ ಉಷ್ಣಾಂಷದ ಏರಿಳಿತವೂ ಕಂಡು ಬಂದಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನವು 34 ರಿಂದ 36 ಡಿಗ್ರಿ ಸೆಲ್ಸಿಯಸ್‌, ಉತ್ತರ ಕರ್ನಾಟಕದ ಬೆಳಗಾವಿ. ಧಾರವಾಡ, ಕೊಪ್ಪಳ, ಹಾವೇರಿ ಭಾಗದಲ್ಲಿ33 ರಿಂದ 36 ಡಿಗ್ರಿ ಸೆಲ್ಸಿಯಸ್‌, ಬೆಳಗಾವಿ ವಿಮಾನ ನಿಲ್ದಾಣ ಭಾಗದಲ್ಲಿ 37 ರಿಂದ 39 ಡಿಗ್ರಿ ಸೆಲ್ಸಿಯಸ್‌, ವಿಜಯಪುರ, ಬೀದರ್‌, ಬಾಗಲಕೋಟೆ, ಗದಗ, ರಾಯಚೂರು, ಕಲಬುರಗಿ ಭಾಗದಲ್ಲಿ ಉಷ್ಣಾಂಶ ಹೆಚ್ಚಿದೆ. ಬೆಂಗಳೂರು ನಗರ, ಹಾಸನ, ಮಡಿಕೇರಿ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಂತಾಮಣಿ, ಮಂಡ್ಯ,ಮೈಸೂರು ಭಾಗದಲ್ಲಿ ಉಷ್ಣಾಂಶವು 34 ರಿಂದ 37 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.