ಬೆಂಗಳೂರು, ಕಲಬುರಗಿ, ತುಮಕೂರು, ಚಿತ್ರದುರ್ಗ ಸಹಿತ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು, ಕಲಬುರಗಿ, ತುಮಕೂರು, ಚಿತ್ರದುರ್ಗ ಸಹಿತ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ

ಬೆಂಗಳೂರು, ಕಲಬುರಗಿ, ತುಮಕೂರು, ಚಿತ್ರದುರ್ಗ ಸಹಿತ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಮೇ ತಿಂಗಳ ಮೊದಲ ವಾರದಲ್ಲೂ ಬಹುತೇ ಕ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದ್ದು, ಭಾನುವಾರದಂದು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಿದೆ. ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಮುನ್ಸೂಚನೆ ನೀಡಲಾಗಿದೆ.

ಮೈಸೂರಿನಲ್ಲಿ ಭಾನುವಾರ ಬೆಳಿಗ್ಗೆಗೆ ಮೋಡ ಕವಿದ ವಾತಾವರಣ ಕಂಡು ಬಂದಿದೆ.
ಮೈಸೂರಿನಲ್ಲಿ ಭಾನುವಾರ ಬೆಳಿಗ್ಗೆಗೆ ಮೋಡ ಕವಿದ ವಾತಾವರಣ ಕಂಡು ಬಂದಿದೆ. (ರವಿಕೀರ್ತಿಗೌಡ)

ಬೆಂಗಳೂರು: ಬೇಸಿಗೆ ಕಾಲದ ಮಾರ್ಚ್‌, ಏಪ್ರಿಲ್‌ ನ ನಂತರ ಮೇ ತಿಂಗಳಲ್ಲೂ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಭಾನುವಾರವೂ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ದಕ್ಷಿಣ ಕರ್ನಾಟಕ ಭಾಗದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ನಾಲ್ಕೈದು ಜಿಲ್ಲೆಗಳಲ್ಲಿ ಮಳೆಯಾಗಬಹುದು. ಆದರೆ ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಆಗೂ ಹಾಸನ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲೂ ಗುಡುಗು ಸಹಿತ ಹಗುರ ಮಳೆಯಾಗಬಹುದು ಎನ್ನುವ ಸೂಚನೆಗಳಿವೆ. ಕಲಬುರಗಿ ಜಿಲ್ಲೆಯಲ್ಲಿ ಬಿಸಿಲ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು. ಭಾನುವಾರ ಕಲಬುರಗಿ ಜಿಲ್ಲೆಯಲ್ಲೂ ಮಳೆಯಾಗಿ ವಾತಾವರಣ ತಂಪಾಗಿಸುವ ಲಕ್ಷಣಗಳಿವೆ.

ಮೇ 4ರ ಭಾನುವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಬಹುದು. ಗುಡುಗು ಸಹಿತ ಮಳೆಯೂ ಸುರಿಯಬಹುದು. ಗಾಳಿಯ ವೇಗವೂ ಹೆಚ್ಚಿರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ.

ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಮಧ್ಯಮಮಳೆಯಾಗಲಿದೆ. ಗುಡುಗು ಕೂಡ ಇರಲಿದೆ. ಬೀದರ್‌. ವಿಜಯಪುರ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಕರ್ನಾಟಕದ ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಆಗಬಹುದು. ಚಿಕ್ಕಮಗಳೂರು, ಬಳ್ಳಾರಿ, ಹಾಸನ, ಮಂಡ್ಯ, ಮೈಸೂರು, ಕೊಡಗು, ವಿಜಯನಗರ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗಬಹುದು.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಬೆಂಗಳೂರಿನ ಕೆಲ ಪ್ರದೇಶದಲ್ಲಿ ಸುರಿಯಬಹುದು. ಗಾಳಿಯ ವೇಗವೂ ಇರಲಿದೆ. ಗರಿಷ್ಠ ಹಾಗ ಕನಿಷ್ಠ ತಾಪಮಾನವು ಬೆಂಗಳೂರು ಭಾಗದಲ್ಲಿ ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್‌ ಮತ್ತು 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು

ಕರ್ನಾಟಕದ ನಾನಾ ಭಾಗಗಳಲ್ಲಿ ಶುಕ್ರವಾರ ಹಾಗೂ ಶನಿವಾರವೂ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಅತ್ಯಧಿಕ ಮಳೆಯಾಗಿದೆ. ದಾವಣಗೆರೆ ನಗರ, ಚಿಕ್ಕಮಗಳೂರು, ಬೆಂಗಳೂರಿನ ಟಿಜಿಹಳ್ಳಿ, ಕೊಡಗಿನ ಸೋಮವಾರಪೇಟೆ, ಹಾವೇರಿ ಜಿಲ್ಲೆಯ ಹಿರೇಕೇರೂರು, ಶಿಗ್ಗಾಂವ್‌, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿ, ಹುಂಚದಕಟ್ಟೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಮಂಡ್ಯ ಜಿಲ್ಲೆಯ ನಾಗಮಂಗಲ, ಕೊಪ್ಪಳ ಜಲ್ಲೆಯ ಗಂಗಾವತಿ, ಮುನಿರಾಬಾದ್‌, ಯಲಬುರ್ಗಾ, ದಕ್ಷಿಣ ಕನ್ನಡದ ಬೆಳ್ತಂಗಡಿ, ಸುಳ್ಯ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ತರೀಕೆರೆ,ಜಯಪುರ, ಕೊಟ್ಟಿಗೆಹಾರ, ಮೈಸೂರು ಜಿಲ್ಲೆಯ ಎಚ್‌ಡಿಕೋಟೆ, ತುಮಕೂರು ಜಿಲ್ಲೆಯ ಕುಣಿಗಲ್‌, ಮಧುಗಿರಿ, ಕಿಬ್ಬನಹಳ್ಳಿ, ರಾಯಚೂರು ಜಿಲ್ಲೆಯ ಸಿಂಧನೂರ, ಹಾಸನ ಜಿಲ್ಲೆ ಅರಕಲಗೂಡು, ವಿಜಯಪುರ ನಗರ, ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟ, ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಮಳೆಯಾಗಿದೆ.

ಕರ್ನಾಟಕದಲ್ಲಿ ಕಲಬುರಗಿ ನಗರದಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಇದಲ್ಲದೇ ವಿಜಯಪುರ, ಬೀದರ್‌ ಜಿಲ್ಲೆಯ ಉಷ್ಣಾಂಶ ಪ್ರಮಾಣವೂ ಅಧಿಕವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಪ್ರಮಾಣವು ಏರಿಕೆಯಾಗಿತ್ತು. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತ್ರ ತಾಪಮಾನವು ಗಮನಾರ್ಹ ಏರಿಕೆಯಾಗಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.