ಕೊಪ್ಪಳದ ಹುಲಿಗಿ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ; ಮೇ 13 ರಿಂದ ಧಾರ್ಮಿಕ ಚಟುವಟಿಕೆ ಶುರು, 21 ಕ್ಕೆ ಮಹಾರಥೋತ್ಸವ
ಕೊಪ್ಪಳದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಮೇ 13ರಿಂದ ಆರಂಭವಾಗಲಿದೆ. ಮೇ 21ರಂದು ಮಹಾರಥೋತ್ಸವವು ಜರುಗಲಿದ್ದು, ಇದಕ್ಕಾಗಿ ಕೊಪ್ಪಳ ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ.

ಕೊಪ್ಪಳ: ಉತ್ತರ ಕರ್ನಾಟಕದ ಪ್ರಮುಖ ಜಾತ್ರೆಗಳಲ್ಲಿ ಒಂದಾದ ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಹುಲಿಗಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ 2025ನೇ ಸಾಲಿನ ಜಾತ್ರಾ ಮಹೋತ್ಸವವು ಮೇ 13 ರಿಂದ 24ರವರೆಗೆ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಈ ಜಾತ್ರಾ ಮಹೋತ್ಸವವು ಒಂದು ತಿಂಗಳ ಕಾಲ ಜರುಗಲಿದ್ದು, ಕರ್ನಾಟಕದ ನಾನಾ ಭಾಗಗಳು ಮಾತ್ರವಲ್ಲದೇ ಆಂಧ್ರ, ತೆಲಗಾಂಣ, ಮಹಾರಾಷ್ಟ್ರ ಹಾಗೂ ಇನ್ನಿತರೆ ಪ್ರದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ದೇವಿ ದರ್ಶನವನ್ನು ಪಡೆಯಲು ಆಗಮಿಸಲಿದ್ದಾರೆ. ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2025ರ ವಾರ್ಷಿಕ ಜಾತ್ರಾ ಮಹೋತ್ಸವದ ನಿಮಿತ್ತ ಮಹಾರಥೋತ್ಸವ ಮೇ 21 ರಂದು ಸಂಜೆ 5.30ಕ್ಕೆ ನಡೆಯಲಿದೆ. ಜಾತ್ರೆಯ ಪ್ರಯುಕ್ತ ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಭಾಗವಾಗಿ ವಿವಿಧ ಧಾರ್ಮಿಕ ಚಟುವಟಿಕೆಗಳು ಮೇ 13 ರಿಂದ ಪ್ರಾರಂಭವಾಗಲಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಸರ್ಕಾರವು ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದೆ. ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವುದರಿಂದ ಈ ಬಾರಿ ಜಾತ್ರಾ ಮಹೋತ್ಸವವನ್ನು ಭಕ್ತಾದಿಗಳಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಿ ಅದ್ದೂರಿಯಾಗಿ ಜಾತ್ರಾ ಮಹೋತ್ಸವವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರತಿನಿತ್ಯ ಪ್ರಸಾದದ ವ್ಯವಸ್ಥೆಯನ್ನು ಮಾಡಲು ಕ್ರಮ ವಹಿಸಲಾಗಿದ್ದು, ಮೇ 12 ರಿಂದ ಒಂದು ತಿಂಗಳ ಕಾಲ ಬೆಳಿಗ್ಗೆ 10 ಗಂಟೆಯಿಂದ ರಾತ್ರಿಯ ತನಕ ನಿರಂತರ ದಾಸೋಹ ಸೇವೆ ಇರಲಿದೆ.
ಬಸ್ - ರೈಲು ಸೇವೆ
ಜಾತ್ರೆಗೆ ವಿವಿಧೆಡೆಯಿಂದ ಭಕ್ತಾಧಿಗಳು ಆಗಮಿಸಲಿದ್ದು, ಕೆ.ಕೆ.ಆರ್.ಟಿ.ಸಿ ಯವರು ಹೆಚ್ಚಿನ ಸಂಖ್ಯೆಯ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಬಸ್ಗಳ ಮೇಲೆ ಜಿಲ್ಲೆಯ ಪ್ರವಾಸೋದ್ಯಮ ಸ್ಥಳಗಳ ಜಾಗೃತಿ ಪೋಸ್ಟರ್ಗಳನ್ನು ಬಿತ್ತರಿಸಬೇಕು. ಜಾತ್ರಾ ಸಮಯದಲ್ಲಿ ತಡೆ ರಹಿತ ರೈಲುಗಳನ್ನು ಮುನಿರಾಬಾದ್ ರೈಲು ನಿಲ್ದಾಣದಲ್ಲಿ ನಿಲುಗಡೆ ಮತ್ತು ಗೂಡ್ಸ್ ರೈಲುಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಕುರಿತಂತೆ ಹುಬ್ಬಳ್ಳಿ ರೈಲ್ವೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು. ಜಾತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ದೇವಸ್ಥಾನಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಹುಲಿಗಿ ಗ್ರಾಮ ಪಂಚಾಯಿತಿಯಿಂದ ನೀಡಬೇಕು. ದೇವಸ್ಥಾನಕ್ಕೆ ಹೋಗುವ ರಸ್ತೆಯ ಮೇಲೆ ಅಂಗಡಿ ಮುಂಗಟ್ಟುಗಳನ್ನು ಇಡದಂತೆ ಕ್ರಮ ಕೈಗೊಳ್ಳಿ. ಜಾತ್ರಾ ಅವಧಿಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಜಾತ್ರಾ ಸಮಯದಲ್ಲಿ ಮದ್ಯಪಾನವನ್ನು ಸಹ ನಿಷೇಧಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ದೇವಸ್ಥಾನದ ಮಹಾರಥಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅರ್ಹತಾ ಪ್ರಮಾಣಪತ್ರ ಪಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಜಾತ್ರಾ ಸಮಯದಲ್ಲಿ ಅಗ್ನಿಶಾಮಕ ವಾಹನವನ್ನು ಕಾಯ್ದಿರಿಸಬೇಕು ಎನ್ನುವ ಸೂಚನೆಗಳನ್ನು ಕೊಪ್ಪಳ ಜಿಲ್ಲಾಡಳಿತದಿಂದ ನೀಡಲಾಗಿದೆ.
ಸಕಲ ಸೌಲಭ್ಯಗಳಿಗೆ ಒತ್ತು
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಜನದಟ್ಟಣೆ ಸೇರುವ ಎಲ್ಲಾ ಕಡೆಗಳಲ್ಲಿ ಕಲ್ಪಿಸಲು ಸಂಕಲ್ಪ ಮಾಡಲಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕೊಪ್ಪಳ, ಗಂಗಾವತಿ, ಹಿಟ್ನಾಳ್ ಕಡೆಯಿಂದ ಬರುವ ಮಾರ್ಗದಲ್ಲಿ 3 ಕಡೆ ಸ್ನಾನಗೃಹಗಳನ್ನು ಒಳಗೊಂಡ ಪ್ರತ್ಯೇಕ ಪುರುಷ ಮತ್ತು ಮಹಿಳೆಯರ ಶೌಚಾಲಯಗಳನ್ನು ಅದೇ ರೀತಿಯಾಗಿ ಹೊಸಪೇಟೆ ಮಾರ್ಗವಾಗಿ ಬರುವ ಭಕ್ತಾದಿಗಳಿಗೆ ವಿವಿಧ 3 ಕಡೆ ಸ್ನಾನಗೃಹಗಳನ್ನು ಒಳಗೊಂಡ ಪ್ರತ್ಯೇಕ ಪುರುಷ ಮತ್ತು ಮಹಿಳೆಯರ ಶೌಚಾಲಯಗಳನ್ನು ಕಲ್ಪಿಸಲಾಗುತ್ತದೆ. ಈ ಬಾರಿ ಪ್ರಥಮ ಬಾರಿಗೆ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ದೇವಸ್ಥಾನದ ಸಮೀಪ ತಲುಪುವಂತೆ ದೇವಸ್ಥಾನದ ಎಡಭಾಗ ಮತ್ತು ಬಲಭಾಗದ ಖಾಸಗಿ ಹೊಲಗಳಲ್ಲಿ ತಾತ್ಕಾಲಿಕ ರಸ್ತೆಗಳನ್ನು ನಿರ್ಮಿಸಿ, ಸರ್ಕಾರಿ ಬಸ್ಸುಗಳಿಗೆ ಹಾಗೂ ಖಾಸಗಿ ಬಸ್ಸುಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎನ್ನುವುದು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ಅವರ ಅಭಿಪ್ರಾಯ.
ದೇವಸ್ಥಾನದಲ್ಲಿ ಪ್ರಥಮ ಬಾರಿಗೆ ದೇವಸ್ಥಾನಕ್ಕೆ ಸೇರಿದ ವಿವಿಧ ಎಲ್ಲಾ ಕಡೆಗೆ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಪ್ರಸಾದಕ್ಕಾಗಿ ಜರ್ಮನ್ ಹ್ಯಾಂಗರ್ ಹಾಗೂ ಇತರೆ ಸೌಲಭ್ಯ ವಿವಿಧ ಕಡೆಗೆ ಸ್ವಾಗತ ಗೇಟುಗಳನ್ನು, ಪ್ಲೆಕ್ಸ್ ಗೇಟುಗಳು, ಸೈನ್ ಬೋರ್ಡುಗಳನ್ನು ಸಾರ್ವಜನಿಕ ಮಾಹಿತಿ ಕೇಂದ್ರ ಹಾಗೂ ದೇವಸ್ಥಾನದ ವಿವಿಧೆಡೆ ಲೈಟಿಂಗ್ ವ್ಯವಸ್ಥೆ, ಎಲ್.ಇ.ಡಿ. ವಾಲ್-ಗಳನ್ನು ಅಳವಡಿಸಿ ಭಕ್ತಾದಿಗಳಿಗೆ ಅನುಕೂಲವನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ದೇವಾಲಯಕ್ಕೆ ಪ್ರತ್ಯೇಕ ವೆಬ್ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಅಳವಡಿಸಿ, ಭಕ್ತಾದಿಗಳಿಗೆ ದೇವಸ್ಥಾನದಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳನ್ನು ನೇರವಾಗಿ ನೋಡಲು ಅನುಕೂಲವನ್ನು ಕಲ್ಪಿಸಲಾಗುತ್ತಿದೆ.
ಗ್ರಾಮಸ್ಥರ ಸಮಿತಿ ರಚನೆ
ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಇಲಾಖೆಯ ಜೊತೆಗೆ ಗ್ರಾಮಸ್ಥರ, ಪ್ರಮುಖರ ಸಮಿತಿಯನ್ನು ರಚಿಸಿ, ಎಲ್ಲಾ ಮೂಲಭೂತ ಸೌಕರ್ಯಗಳ ನಿರ್ವಹಣೆಯ ಜವಾಬ್ದಾರಿಯನ್ನು ಅವರಿಗೆ ನೀಡಿ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ನಿಗಾ ವಹಿಸಲು ಕ್ರಮ ಜರುಗಿಸಲಾಗುತ್ತಿದೆ. ದೇವಸ್ಥಾನದ ಎಲ್ಲಾ ಕಾರ್ಯಗಳನ್ನು ನೋಡಿಕೊಳ್ಳಲು ಸ್ವಯಂ ಸೇವಕರನ್ನು ನಿಯೋಜಿಸಿ, ಸಾಂಗೋಪಾಂಗವಾಗಿ ನೇರವೇರಲು ಕ್ರಮ ವಹಿಸಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ ಪ್ರದೇಶ, ಪಾರ್ಕಿಂಗ್ ಪ್ರದೇಶ, ನದಿ ತೀರ, ಬಯಲು ಪ್ರದೇಶ, ಮುಖ್ಯರಸ್ತೆಯಲ್ಲಿ ಸ್ವಚ್ಛತೆಯನ್ನು ಕಾಪಾಡಲು ಪ್ರತ್ಯೇಕ ಸಮಿತಿಯನ್ನು ರಚಿಸಿ, ಆ ಮೂಲಕ ಸಮಗ್ರ ಕ್ಷೇತ್ರದ ಸ್ವಚ್ಛತೆಗಾಗಿ ಸ್ವಚ್ಛತಾ ಸಿಬ್ಬಂದಿಗಳನ್ನು ಬಳಸಿಕೊಂಡು ಭಕ್ತಾದಿಗಳ ಆರೋಗ್ಯ ಸುರಕ್ಷತೆಗೆ ಕ್ರಮ ವಹಿಸಲಾಗುತ್ತಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಆರೋಗ್ಯ ಸುರಕ್ಷತೆಗಾಗಿ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಭಕ್ತಾದಿಗಳ ಸುರಕ್ಷತೆಗಾಗಿ ಅಗ್ನಿಶಾಮಕ ದಳ, ಕಾನೂನು ಮತ್ತು ಸುವ್ಯವಸ್ಥೆಗಾಗಿ ಆರಕ್ಷಕ ತಂಡ ಮತ್ತು ಹೆಚ್ಚಿನ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಲಾಗುತ್ತಿದೆ ಎನ್ನುವು ಸ್ಥಳೀಯ ಶಾಸಕ ರಾಘವೇಂದ್ರ ಹಿಟ್ನಾಳ್ ವಿವರಣೆ.