ಕನ್ನಡ ಸುದ್ದಿ  /  Karnataka  /  Kpcc President Dk Shivakumar Speach At Mudigere Congress Meeting

DK Shivakumar: ಕೊಟ್ಟ ಕುದುರೆ ಏರಲಾಗದವನು ವೀರನೂ ಅಲ್ಲ, ಶೂರನೂ ಅಲ್ಲ- ಡಿಕೆ ಶಿವಕುಮಾರ್‌ ಹೀಗಂದದ್ದು ಯಾರಿಗೆ?

ಕೊಟ್ಟ ಕುದುರೆ ಏರಲಾಗದವನು, ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನೂ ಮಾಡದಿದ್ದಾಗ, ಅಧಿಕಾರ ಹೋಗುವಾಗ ಏನು ಮಾಡುತ್ತೀರಾ? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

DK Shivakumar: ಕೊಟ್ಟ ಕುದುರೆ ಏರಲಾಗದವನು ವೀರನೂ ಅಲ್ಲ, ಶೂರನೂ ಅಲ್ಲ- ಡಿಕೆಶಿ
DK Shivakumar: ಕೊಟ್ಟ ಕುದುರೆ ಏರಲಾಗದವನು ವೀರನೂ ಅಲ್ಲ, ಶೂರನೂ ಅಲ್ಲ- ಡಿಕೆಶಿ

ಮೂಡಿಗೆರೆ: ಕೊಟ್ಟ ಕುದುರೆ ಏರಲಾಗದವನು, ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನೂ ಮಾಡದಿದ್ದಾಗ, ಅಧಿಕಾರ ಹೋಗುವಾಗ ಏನು ಮಾಡುತ್ತೀರಾ? ಎಂದು ಮೂಡಿಗೆರೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅಲ್ಲಮಪ್ರಭುವಿನ ವಚನವನ್ನು ನೆನಪಿಸಿಕೊಂಡು ಬಿಜೆಪಿಗೆ ಡಿಕೆ ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ.

ನಿಮ್ಮ ಅಧಿಕಾರ ಅವಧಿಯಲ್ಲಿ ಜನರ ಬದುಕಿನಲ್ಲಿ ಬದಲಾವಣೆ ತರಲು ಯಾವ ನಿರ್ಧಾರ ಕೈಗೊಂಡಿದ್ದೀರಿ ಎಂದು ಸಿ. ಟಿ ರವಿ, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನು ಕೇಳಲು ಬಯಸುತ್ತೇನೆ. ಬೆಲೆ ಏರಿಕೆಯಿಂದ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಆದಾಯ ಡಬಲ್ ಆಗುತ್ತೆ ಎಂದರು. ಆಯಿತಾ? ರಸಗೊಬ್ಬರ, ಪೆಟ್ರೋಲ್, ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಾಗಿದೆ. ಆದಾಯ ಪಾತಾಳಕ್ಕೆ ಕುಸಿದು, ವೆಚ್ಚ ಆಕಾಶಕ್ಕೆ ಏರಿದೆ ಎಂದು ಹೇಳಿದ ಅವರು ಅಲ್ಲಮಪ್ರಭುವಿನ "ಕೊಟ್ಟ ಕುದುರೆ" ವಚನವನ್ನು ನೆನಪಿಸಿದ್ದಾರೆ.

ಮೂಡಿಗೆರೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿ

"ನನಗೆ ನಿಮ್ಮ ಹೂವಿನ ಹಾರ, ಜೈಕಾರ ಬೇಡ. ನಾನು ಇದಕ್ಕಾಗಿ ಬರಲಿಲ್ಲ. ಮುಂದಿನ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ ವಿಧಾನಸೌಧಕ್ಕೆ ಕಳಿಸಿದಾಗ ನನಗೆ ಹೂವಿನ ಹಾರ, ಜೈಕಾರ ಹಾಕಿದಂತೆ. ಚುನಾವಣೆಯಲ್ಲಿ ನೀವು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು. ಯಾರೇ ಅಭ್ಯರ್ಥಿ ಆದರೂ ನಿಜವಾದ ಅಭ್ಯರ್ಥಿಗಳು ನಾನು, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು. ಹೀಗಾಗಿ ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಈ ಕ್ಷೇತ್ರ ಬಹಳ ಜನನಾಯಕರನ್ನು ನೀಡಿದೆ. ಮುಂದಿನ ಚುನಾವಣೆಯಲ್ಲಿ ಕ್ಷೇತ್ರಕ್ಕೆ ಯಾವ ಮೀಸಲಾತಿ ಸಿಗುತ್ತದೋ ನೋಡಬೇಕು. ಇಲ್ಲಿನ ಜನ ವಿದ್ಯಾವಂತರು, ಬುದ್ದಿವಂತರು ಇದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅದರದೇ ಆದ ಸಿದ್ಧಾಂತ ಇದೆ. ಕಾಂಗ್ರೆಸ್ ಜಾತಿ ಮೇಲಲ್ಲ, ನೀತಿ ಮೇಲೆ ನಿಂತಿದೆ. ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ಗಾಂಧಿ ಅವರು ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿದರು. ಮೋದಿ ಅವರ ಸರ್ಕಾರ ಈ ದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ಜನರಲ್ಲಿ ಧರ್ಮ, ದ್ವೇಷದ ವಿಷ ಬೀಜ ಬಿತ್ತುತ್ತಿದ್ದಾರೆ. ಅವರು ಭಾವನೆಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದರು.

"ರಾಹುಲ್ ಗಾಂಧಿ ಅವರು ಇದರ ವಿರುದ್ಧ ಹೋರಾಡಿ ದೇಶವನ್ನು ಒಂದುಗೂಡಿಸಲು ಭಾರತ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಇಬ್ಬರೂ ಪ್ರಧಾನಮಂತ್ರಿ ಆಗಬಹುದಿತ್ತು. ಆದರೆ ಆ ಸ್ಥಾನ ತ್ಯಾಗ ಮಾಡಿ, ದೇಶದ ಹಿತ ಕಾಯಲು ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಮನಮೋಹನ್ ಸಿಂಗ್ ಅವರು ತಮ್ಮ ಅವಧಿಯಲ್ಲಿ ಜನಪರ ಕಾಯ್ದೆ ಹಾಗೂ ಯೋಜನೆಗಳನ್ನು ಜಾರಿಗೆ ತಂದರು. ಆಹಾರ ಭದ್ರತೆ, ಶಿಕ್ಷಣ ಹಕ್ಕು, ಉದ್ಯೋಗ ಭದ್ರತೆ, ಆರೋಗ್ಯ ಸೌಲಭ್ಯ ಸೇರಿದಂತೆ ಹಲವು ಯೋಜನೆ ತಂದರು. ಇಂದಿರಾ ಗಾಂಧಿ, ನೆಹರೂ, ಲಾಲ್ ಬಹಾದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ ಅವರು ಪ್ರಧಾನಮಂತ್ರಿ ಆಗಿದ್ದಾಗ ದೇಶದ ಪ್ರಗತಿಗೆ ಪೂರಕವಾದ ಯೋಜನೆ ರೂಪಿಸಲಾಗಿತ್ತು. ಈ ಇತಿಹಾಸ ತಿರುಚಲು ಸಾಧ್ಯವಿಲ್ಲ ಎಂದು ಡಿಕೆಶಿ ಅಭಿಪ್ರಾಯಪಟ್ಟಿದ್ದಾರೆ.

"ಇಂದಿರಾ ಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ ಮಾಡಿ ದೇಶದ ಬಡವರಿಗೆ ಬ್ಯಾಂಕಿಂಗ್ ಸೌಲಭ್ಯ ಸಿಗುವಂತೆ ಮಾಡಿದರು. ರಾಹುಲ್ ಗಾಂಧಿ ಅವರಿಗೆ ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ವಯಸ್ಸಾದ ಮಹಿಳೆ ಸೌತೇಕಾಯಿ ತಂದು ಕೊಟ್ಟು, ಇದು ನಿಮ್ಮ ಅಜ್ಜಿ ಇಂದಿರಾಗಾಂಧಿಯವರು ಕೊಟ್ಟ ಜಮೀನಿನಲ್ಲಿ ಬೆಳೆದದ್ದು ಎಂದರು. ಇದು ಈ ದೇಶದ ಇತಿಹಾಸ. ಈ ದೇಶಕ್ಕೆ ಶಕ್ತಿ ತುಂಬಲು ಬಡವರಿಗೆ ಜಮೀನು, ನಿವೇಶನ ನೀಡಿದ್ದು, ಬ್ಯಾಂಕ್ ರಾಷ್ಟ್ರೀಕರಣ ಮಾಡಿದ್ದು, ಉದ್ಯೋಗ ಮಾಡಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ಇಂತಹ ಒಂದು ಯೋಜನೆ ಜಾರಿ ತಂದಿಲ್ಲ. ಅವರು ನೋಟು ರದ್ದು, ಆರ್ಟಿಕಲ್ 370, ಏಕರೂಪ ನಾಗರಿಕ ಕಾಯ್ದೆ, ಇಂತಹ ಭಾವನಾತ್ಮಕ ವಿಚಾರಗಳತ್ತ ಗಮನಹರಿಸಿದ್ದಾರೆ. ಭಾವನೆ ಬಿಟ್ಟು ಜನರ ಹೊಟ್ಟೆ ತುಂಬುವ ಯಾವ ಕಾರ್ಯಕ್ರಮವನ್ನು ಬಿಜೆಪಿ ಸರ್ಕಾರ ನೀಡಿದೆ?" ಎಂದು ಡಿಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.

"ನಿನ್ನೆ ಶಿವಮೊಗ್ಗದಲ್ಲಿ ಜನಾಕ್ರೋಶ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಮಲೆನಾಡಿನ ಜನರ ಸಮಸ್ಯೆ ಬಗ್ಗೆ ರಮೇಶ್ ಹೆಗಡೆ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೆವು. ಅವರು ಅಧ್ಯಯನ ಮಾಡಿ ಸಮಸ್ಯೆಗಳ ಬಗ್ಗೆ ಪಟ್ಟಿ ನೀಡಿದ್ದಾರೆ. ಈ ಭಾಗದಲ್ಲಿ ಒತ್ತುವರಿ, ಬಗರ್ ಹುಕುಂ ಸಮಸ್ಯೆಗಳಿರುವುದಾಗಿ ತಿಳಿಸಿದ್ದಾರೆ. ಕಸ್ತೂರಿ ರಂಗನ್ ವರದಿ, ರಸ್ತೆ ಸಂಪರ್ಕ, ಕಾಫಿ ಬೆಳೆಗಾರರ ಸಮಸ್ಯೆ, ರಸಗೊಬ್ಬರ, ಆಶ್ರಯ ಮನೆ ವಿಚಾರವಾಗಿ ಪಟ್ಟಿ ನೀಡಿದ್ದಾರೆ"

"ಮಲೆನಾಡು ಹಾಗೂ ಕರಾವಳಿ ಪ್ರದೇಶಕ್ಕೆ ಕಾಂಗ್ರೆಸ್ ಪಕ್ಷ ಪ್ರತ್ಯೇಕ ಪ್ರಣಾಳಿಕೆ ನೀಡುತ್ತದೆ. ಬಿಜೆಪಿ ಸರ್ಕಾರ ಕಳೆದ ಬಾರಿ ಚುನಾವಣೆಯಲ್ಲಿ ಕೊಟ್ಟ ಪ್ರಣಾಳಿಕೆ ನೋಡಿ. ಒಂದು ತಿಂಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ 1 ಲಕ್ಷದವರೆಗೆ ಸಾಲ ಮನ್ನಾ ಮಾಡುತ್ತೇವೆ ಎಂದು ತಿಳಿಸಿದರು. ಸಾಲ ಮನ್ನಾ ಆಯಿತೇ? ನಿಮ್ಮ ಖಾತೆಗಳಿಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ನಿಮ್ಮ ಖಾತೆಗೆ ಹಣ ಬಂತಾ? ಕೇವಲ ಸುಳ್ಳಿನ ಕಂತೆ ಮೇಲೆ ರಾಜಕೀಯ ಮಾಡುತ್ತಾರೆ. ಅವರು ಕೊಟ್ಟ 600 ಭರವಸೆಗಳಲ್ಲಿ 550 ಭರವಸೆ ಈಡೇರಿಸಿಲ್ಲ. ಈ ಬಗ್ಗೆ ದಿನನಿತ್ಯ ಪ್ರಶ್ನೆ ಕೇಳಿದರೂ ಯಾವುದೇ ಉತ್ತರ ನೀಡುತ್ತಿಲ್ಲ" ಎಂದು ಸಮಾವೇಶದಲ್ಲಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.