ಕನ್ನಡ ಸುದ್ದಿ  /  Karnataka  /  Lokayukta Initiates Investigation Against Karnataka Home Minister Araga Jnanendra

Araga Jnanendra: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತ ತನಿಖೆ ಆರಂಭ

ನಿಯಮಗಳನ್ನು ಉಲ್ಲಂಘಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ನಿವೇಶನ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ
ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನಿಯಮಗಳನ್ನು ಉಲ್ಲಂಘಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ನಿವೇಶನ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ತನಿಖೆ ಆರಂಭಿಸಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಹೈಕೋರ್ಟ್‌ನ ಆದೇಶದಂತೆ ಲೋಕಾಯುಕ್ತಕ್ಕೆ ತಮ್ಮ ಸರ್ಕಾರ ಸಂಪೂರ್ಣ ಅಧಿಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ ಘೋಷಿಸಿದ್ದರು. ನಿನ್ನೆಯಷ್ಟೇ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ಆಮ್​ ಆದ್ಮಿ ಪಕ್ಷ ದೂರು ನೀಡಿತ್ತು.

ಜ್ಞಾನೇಂದ್ರ ಮತ್ತು ಇತರ ಪ್ರಭಾವಿ ನಾಯಕರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ಹಂಚಿಕೆ ಮಾಡಿರುವ ಕರ್ನಾಟಕ ಸರ್ಕಾರದ ನೀತಿಗೆ ಈಗಾಗಲೇ ಸುಪ್ರೀಂ ಕೋರ್ಟ್ ಮೌಖಿಕವಾಗಿ ಛೀಮಾರಿ ಹಾಕಿದೆ ಎಂದು ದೂರಿನಲ್ಲಿ ಎಎಪಿ ಹೇಳಿದೆ. ಆರಗ ಜ್ಞಾನೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಅಥವಾ ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಎಎಪಿ ಒತ್ತಾಯಿಸಿದೆ.

ಭ್ರಷ್ಟಾಚಾರಕ್ಕೆ ಆಸ್ಪದ ನೀಡುವುದರಿಂದ ಜಿ ಕೆಟಗರಿ ನಿವೇಶನಗಳನ್ನು ಮಂಜೂರು ಮಾಡುವಂತಿಲ್ಲ ಎಂಬ ವಾಸ್ತವದ ಹೊರತಾಗಿಯೂ ಹಂಚಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಬಿಡಿಎ ಆಯುಕ್ತ ಎಂ ಬಿ ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿದೆ.

ಕಳೆದ 4 ವರ್ಷಗಳಿಂದ ಅತಿವೃಷ್ಟಿ ಹಾವಳಿಯಿಂದ ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿದ್ದರು ಸಹ ಅವರುಗಳಿಗೆ ಸೂಕ್ತ ಮನೆಗಳನ್ನು ಕಟ್ಟಿಕೊಡಲು ವಿಫಲರಾಗಿರುವ ಬಿಜೆಪಿ ಸರ್ಕಾರ ಈಗ ತನ್ನ ಮಂತ್ರಿ ಹಾಗೂ ಪ್ರಭಾವಿಗಳಿಗೆ ಈ ರೀತಿಯ ಕೋಟ್ಯಂತರ ರೂಪಾಯಿಗಳ ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡುವ ಪರಿ 40 %ಕಮಿಷನ್ ಬಿಜೆಪಿ ಸರ್ಕಾರದ ಮತ್ತೊಂದು ರೂಪವಾಗಿದೆ ಎಂದು ಬೆಂಗಳೂರು ಎಎಪಿ ನಗರಾಧ್ಯಕ್ಷ ಮೋಹನ್ ದಾಸರಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.

ಸುಪ್ರೀಂ ಕೋರ್ಟ್ 2021 ರ ಅಕ್ಟೋಬರ್ 29 ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಈ ರೀತಿಯ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆರ್ ಎಂವಿ ಬಡಾವಣೆ ಯಂತಹ ಪ್ರತಿಷ್ಠಿತ ಜಾಗದಲ್ಲಿ ಮಂತ್ರಿ ಮಹೋದಯರುಗಳಿಗೆ ಸೈಟು ಹಂಚಿಕೆಯ ಅವ್ಯವಹಾರಗಳಲ್ಲಿ ಮುಳುಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ದೇಶದ ಅತ್ಯುನ್ನತ್ತ ನ್ಯಾಯಾಲಯಗಳ ಆದೇಶಗಳಿಗೂ ಸಹ ಕಿಂಚಿತ್ತೂ ಕಿಮ್ಮತ್ತು ಈ ಬಿಜೆಪಿ ಸರ್ಕಾರ ನೀಡುತ್ತಿಲ್ಲವೆಂದು ಎಂದು ಮೋಹನ್ ದಾಸರಿ ವಿಷಾದ ವ್ಯಕ್ತಪಡಿಸಿದರು.

ಉಂಡೂ ಹೋದ ಕೊಂಡೂ ಹೋದ ಎಂಬಂತೆ ರಾಜ್ಯದಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ ಗೃಹಸಚಿವ ಆರಗ ಜ್ಞಾನೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈ ಪ್ರಕರಣದಿಂದ ಸ್ಪಷ್ಟವಾಗುತ್ತಿದೆ. ಈ ಕೂಡಲೇ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ವಜಾಗೊಳಿಸಬೇಕು ಅಥವಾ ಮರ್ಯಾದೆಯಿಂದ ತಾವೇ ರಾಜೀನಾಮೆ ನೀಡಬೇಕೆಂದು ರಾಜ್ಯ ವಕ್ತಾರ ಹಾಗೂ ಹಿರಿಯ ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಆಮ್ ಆದ್ಮಿ ಪಕ್ಷವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರವಾದ ಹೋರಾಟಕ್ಕೆ ಇಳಿಯಲಿದೆ ಎಂದು ಸರಕಾರವನ್ನು ಎಚ್ಚರಿಸಿದ್ದಾರೆ.

IPL_Entry_Point

ವಿಭಾಗ