Mangalore News: ಮಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ ಪೋಕ್ಸೋ ಅಡಿ ಬಂಧಿತನಾಗಿದ್ದ ಆರೋಪಿ
Mangalore News: ಕೆಲವು ದಿನಗಳಿಂದ ಪ್ರಕರಣವೊಂದರಲ್ಲಿ ಸಿಲುಕಿ ಮಂಗಳೂರು ಜೈಲು ಸೇರಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಂಗಳೂರು: ಶೌಚಾಲಯದ ಕಿಟಕಿಗೆ ಶಾಲಿನಲ್ಲಿ ನೇಣು ಬಿಗಿದುಕೊಂಡು ಮಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಲೈಂಗಿಕ ಕಿರುಕುಳದಿಂದ ಮಕ್ಕಳ ರಕ್ಷಣಾ ಕಾಯಿದೆಯಡಿ( ಪೋಕ್ಸೋ) ಬುಧವಾರ ಬಂಧನಕ್ಕೆ ಒಳಗಾಗಿದ್ದದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಮಾರಿಗುಡಿ ದೇವಸ್ಥಾನದ ಬಳಿ ನಿವಾಸಿ ಪ್ರಕಾಶ್ ಗೋಪಾಲ ಮೂಲ್ಯ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಜೈಲಿನ ಬಿ. ಬ್ಯಾರಕ್ ನ ಶೌಚಾಲಯದ ಕಿಟಕಿಯ ಸರಳುಗಳಿಗೆ ಆರೋಪಿ ಶಾಲಿನಿಂದ ನೇಣು ಬಿಗಿದುಕೊಂಡಿದ್ದನ್ನು ಜೈಲಿನ ಭದ್ರತಾ ಸಿಬ್ಬಂದಿ ಗಮನಿಸಿದ್ದರು. ತಕ್ಷಣವೇ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತ ಅಸು ನೀಗಿರುವುದಾಗಿ ಆಸ್ಪತ್ರೆಯಲ್ಲಿ ವೈದ್ಯರು ತಿಳಿಸಿದರು.
ಕೆಲವು ದಿನಗಳಿಂದ ಮಾನಸಿಕವಾಗಿ ಕುಸಿದಿದ್ದ ಪ್ರಕಾಶ್ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಪ್ರಕರಣದಲ್ಲಿ ಸಿಲುಕಿದ ಬೇಸರದಲ್ಲಿ ಇರುತ್ತಿದ್ದ ಎಂದು ಜತೆಯಲ್ಲಿದ್ದವರು ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ
ಭಾರತೀಯ ನಾಗರಿಕ ಸಂಹಿತೆ (ಬಿಎನ್ಎಸ್)ನ ಸೆಕ್ಷನ್ 65ರ 4 ಮತ್ತು 65ರಡಿ ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧಿತನಾಗಿದ್ದು, ವಿಚಾರಣಾಧೀನ ಕೈದಿಯಾಗಿ ಜೈಲಿಗೆ ದಾಖಲಾಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮಂಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.
(ಗಮನಿಸಿ: ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಪೊಲೀಸರ, ಆಪ್ತಸಮಾಲೋಚಕರ, ವೈದ್ಯರ ನೆರವು ಪಡೆಯಿರಿ. ಕರ್ನಾಟಕದಲ್ಲಿ ಆರೋಗ್ಯ ಸಹಾಯವಾಣಿ 104, ವೃದ್ಧರ ಸಹಾಯವಾಣಿ 1090, ಮಕ್ಕಳ ಸಹಾಯವಾಣಿ 1098 ಮತ್ತು ಸ-ಮುದ್ರ ಸಹಾಯವಾಣಿ 98803 96331 ಮೂಲಕ ಟೆಲಿ ಕೌನ್ಸೆಲಿಂಗ್ ನೆರವು ಪಡೆದುಕೊಳ್ಳಿ. ಕೊನೇ ನಿರ್ಧಾರಕ್ಕೆ ಮೊದಲು ನಿಮ್ಮವರ ಬಗ್ಗೆ ಒಂದು ಕ್ಷಣ ಯೋಚಿಸಿ.)
