ಮಂಗಳೂರು: ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ರು ಬಂಟ್ವಾಳ ತಾಲೂಕು ಖಜಾನೆಯ 2 ಸಿಬ್ಬಂದಿ
ಗಂಡನ ಮರಣ ಉಪದಾನ ನೀಡುವುದಕ್ಕೆ ಮಹಿಳೆಯ ಬಳಿ ಲಂಚ ಕೇಳಿದ್ದ ಬಂಟ್ವಾಳ ತಾಲೂಕು ಖಜಾನೆಯ ಇಬ್ಬರು ಸಿಬ್ಬಂದಿ ಬುಧವಾರ (ಮೇ 14) ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಬ್ಬರು ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದ ವ್ಯಕ್ತಿಯೊಬ್ಬರು ಕಳೆದ ವರ್ಷ ಮರಣಹೊಂದಿದ್ದು, ಅವರ ಮರಣದ ಉಪದಾನದ ಕುರಿತು ಬಂಟ್ವಾಳ ತಾಲೂಕು ಖಜಾನೆಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟ ಪ್ರಕರಣವಿದು. ಮಹಿಳೆಯೊಬ್ಬರು ನೀಡಿದ ದೂರಿನಂತೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ 2 ಗಂಟೆಯ ಬಳಿಕ ಬಂಟ್ವಾಳ ಖಜಾನೆಗೆ ದಾಳಿ ಮಾಡಿದ್ದು, ಈ ಸಂದರ್ಭ, ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಪ್ರಥಮ ದರ್ಜೆ ಸಹಾಯಕ ಬಸವೇಗೌಡ ಅವರು ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದರು. ಇದೀಗ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ಪ್ರಕರಣದ ವಿವರ ಹೀಗಿದೆ
ದೂರುದಾರ ಮಹಿಳೆಯ ಪತಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದನಂತರ ದೂರುದಾರ ಮಹಿಳೆಯ ಪತಿ ಜೂನ್ 2024ರಂದು ಮರಣ ಹೊಂದಿರುತ್ತಾರೆ. ದೂರುದಾರ ಮಹಿಳೆ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಬಳಿ ಅವರ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿಲ್ಲ. ಯಾಕೆ ಎಂದು ಕೇಳಿದಾಗ ಉಪದಾನವನ್ನು ಜಮೆ ಮಾಡಿದ್ದಕ್ಕೆ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ 5000 ರೂಪಾಯಿ ಹಾಗೂ ಬಂಟ್ವಾಳ ಖಜಾನೆಯ ಏಫ್ಡಿಎ ಬಸವೆ ಗೌಡ ಬಿ.ಎನ್. 5000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು,ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೇಗೌಡ ವಿರುದ್ಧ ಪ್ರಕರಣ ದಾಖಲಾಯಿತು.
ಲೋಕಾಯುಕ್ತ ಟ್ರಾಪ್
ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ರವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.
(ವರದಿ- ಹರೀಶ್ ಮಾಂಬಾಡಿ, ಮಂಗಳೂರು)