ಮೈಸೂರು: ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಮೊಮ್ಮಕ್ಕಳ ರಕ್ಷಣೆಗೆ ಹೋದ ತಾತ; ಮೂವರೂ ಸಾವು
ತಿ ನರಸೀಪುರದಲ್ಲಿ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗುತ್ತಿದ್ದಾಗ ಮಕ್ಕಳ ರಕ್ಷಣೆಗೆ ಅಜ್ಜ ನೀರಿಗಿಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ತಾತ ಚೌಡಯ್ಯ ಹಾಗೂ ಮೊಮ್ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಕುಟುಂಬದ ಮೂವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ಮೈಸೂರು: ನೀರಿನಲ್ಲಿ ಮುಳುಗಿ ಮೂವರು ಮೃತರಾಗಿರುವ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲೂಕಿನಲ್ಲಿ ನಡೆದಿದೆ. ಒಂದೇ ಕುಟುಂಬದ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲ ಸಮಾಧಿಯಾಗಿದ್ದಾರೆ. ತಾತ ಚೌಡಯ್ಯ (70) ಹಾಗೂ ಮೊಮ್ಮಕ್ಕಳಾದ ಭರತ್ (13), ಧನುಷ್ (10) ಮೃತ ದುರ್ದೈವಿಗಳು. ತಿ ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳಾಗಿರುವ ಇವರು ಕಾವೇರಿ ನದಿ ಬಳಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ.
ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗುತ್ತಿದ್ದ ಹಿನ್ನೆಲೆ ಮಕ್ಕಳ ರಕ್ಷಣೆಗೆ ಅಜ್ಜ ಚೌಡಯ್ಯ ಕೂಡಾ ತೆರಳಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ತಾತ ಚೌಡಯ್ಯ ಕೂಡಾ ಪ್ರಾಣ ಕಳೆದುಕೊಂಡಿದ್ದಾರೆ. ಕುಟುಂಬದ ಮೂವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ತಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಬಿನಿ ಬಲದಂಡೆ ನಾಲೆಯಲ್ಲಿ ಅಕ್ರಮ ಮಣ್ಣು ಸಾಗಾಣಿಕೆ ಆರೋಪ
ಕಬಿನಿ ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಆರೋಪದ ಮೇಲೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಕರ್ನಾಟಕ ಅಂಬೇಡ್ಕರ್ ಸೇನೆ ಸಂಘಟನೆ ಸದಸ್ಯರು ದಾಳಿ ನಡೆಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚಿನ್ನದಗುಡಿಹುಂಡಿ ಗ್ರಾಮದ ಬಳಿ ಹಾದು ಹೋಗಿರುವ ಕಬಿನಿ ಬಲದಂಡೆ ನಾಲೆಯಲ್ಲಿ ಘಟನೆ ನಡೆದಿದೆ, ಅಕ್ರಮ ಮಣ್ಣು ಸಾಗಾಟ ನಡೆಯುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಕಬಿನಿ ಬಲದಂಡೆ ನಾಲೆಯಲ್ಲಿ ಹಾಡಹಗಲೇ ರಾಜಾರೋಷವಾಗಿ ಇಲಾಖೆಯ ಅಧಿಕಾರಿಗಳ ಅನುಮತಿ ಪಡೆಯದೇ ಟ್ರ್ಯಾಕ್ಟರ್, ಟಿಪ್ಪರ್ ಹಾಗೂ ಹಿಟಾಚಿ ಬಳಸಿಕೊಂಡು ರಸ್ತೆ ನಿರ್ಮಾಣಕ್ಕೆ ಅಕ್ರಮವಾಗಿ ಮಣ್ಣು ಸಾಗಾಟದ ಆರೋಪ ಕೇಳಿ ಬಂದಿತ್ತು. ಕಬಿನಿ ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಕರ್ನಾಟಕ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಬಸವಟ್ಟಿಗೆ ನಾಗೇಂದ್ರ ಮತ್ತು ನಂಜನಗೂಡು ತಾಲ್ಲೂಕು ಅಧ್ಯಕ್ಷ ಮುಳ್ಳೂರು ಸ್ವಾಮಿ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ದಾಳಿ ನಡೆದಿದೆ.
ಈ ವೇಳೆ ಅನುಮತಿ ಇಲ್ಲದೆ ಅಕ್ರಮವಾಗಿ ಮಣ್ಣನ್ನು ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಿದ್ದು ವಾಹನಗಳನ್ನು ವಶಕ್ಕೆ ಪಡೆದುಕೊಂಡು ಕವಲಂದೆ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ರಾಜಕೀಯ ಮುಖಂಡನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಹೆಸರನ್ನು ಹೇಳಿಕೊಂಡು ರಾಜಾರೋಷವಾಗಿ ಅಕ್ರಮವಾಗಿ ಮಣ್ಣನ್ನು ಸಾಗಣೆ ಮಾಡುತ್ತಿದ್ದಾರೆ. ಇವರೊಂದಿಗೆ ಅಧಿಕಾರಿಗಳು ಕೂಡ ಶಾಮೀಲಾಗಿ ನಮ್ಮ ಸಂಪತ್ತನ್ನು ನಾಶ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಪ್ರಕರಣವನ್ನು ದಾಖಲು ಮಾಡಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಈ ಕೂಡಲೇ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಎಫ್ಐಆರ್ ದಾಖಲು ಮಾಡಬೇಕು ಎಂದು ಕರ್ನಾಟಕ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಬಸವಟ್ಟಿಗೆ ನಾಗೇಂದ್ರ, ನಂಜನಗೂಡು ತಾಲ್ಲೂಕು ಅಧ್ಯಕ್ಷ ಮುಳ್ಳೂರು ಸ್ವಾಮಿ ಆಗ್ರಹಿಸಿದ್ದಾರೆ.
