ಕನ್ನಡ ಸುದ್ದಿ  /  Karnataka  /  Names Of Minorities Not Removed From Voter List Says Cm Basavaraj Bommai

CM Bommai on Voter List issue: ಮತದಾರರ ಪಟ್ಟಿಯಲ್ಲಿ ಅಲ್ಪಸಂಖ್ಯಾತರ ಹೆಸರು ಕೈಬಿಟ್ಟಿಲ್ಲ, ಕನ್ನಡಿಗನ ಮೇಲೆ ಹಲ್ಲೆ ತನಿಖೆಗೆ ಆದೇಶ: ಸಿಎಂ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆ ಬಗ್ಗೆ ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಧಾರವಾಡ: ರಾಜ್ಯಾದ್ಯಂತ ಅನಧಿಕೃತ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ. ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು.

ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಚಿಲುಮೆ ಸಂಸ್ಥೆಯ ಸಿಬ್ಬಂದಿ ಒಂದೇ ತಿಂಗಳಿನಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹೆಸರನ್ನು ರದ್ದುಗೊಳಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇಬ್ಬರು ಐಎಎಸ್ ಅಧಿಕಾರಿಗಳ ತಲೆದಂಡವೂ ಆಗಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ.

ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಆದೇಶ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಬೆಳಗಾವಿಯ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಬಾವುಟ ಹಿಡಿದು ಕುಣಿದ ವಿದ್ಯಾರ್ಥಿಗೆ ಕೆಲ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಥಳಿಸಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಅಂತರ-ಕಾಲೇಜು ಉತ್ಸವ ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕನ್ನಡ ಹಾಡೊಂದು ಪ್ಲೇ ಆಗುತ್ತಿದ್ದಂತೆಯೇ ಕನ್ನಡ ಧ್ವಜ ಹಿಡಿದು ವಿದ್ಯಾರ್ಥಿಯೊಬ್ಬ ಡ್ಯಾನ್ಸ್ ಮಾಡಿದ್ದಾನೆ. ಆದರೆ ಅಲ್ಲಿದ್ದ ಕೆಲ ವಿದ್ಯಾರ್ಥಿಗಳು ಆ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಕೂಡ ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದು ಕನ್ನಡಿಗರನ್ನು ಕೇರಳಿಸಿದ್ದು, ಕೆಲ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.

ಈ ಘಟನೆಯನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಖಂಡಿಸಿದ್ದಾರೆ. ಸರಣಿ ಟ್ವೀಟ್​ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ, ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದಿದ್ದಾರೆ.

ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ಬಾಲಕನ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಕೂಡ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ.

IPL_Entry_Point

ವಿಭಾಗ