ನಾಳೆ ಕರ್ನಾಟಕದಲ್ಲೂ ನೀಟ್‌ ಪರೀಕ್ಷೆ, ಪುರುಷ- ಮಹಿಳಾ ಅಭ್ಯರ್ಥಿಗಳು ಇವುಗಳನ್ನು ಕೇಂದ್ರಗಳಿಗೆ ತೆಗೆದುಕೊಂಡು ಹೋಗುವ ಹಾಗಿಲ್ಲ
ಕನ್ನಡ ಸುದ್ದಿ  /  ಕರ್ನಾಟಕ  /  ನಾಳೆ ಕರ್ನಾಟಕದಲ್ಲೂ ನೀಟ್‌ ಪರೀಕ್ಷೆ, ಪುರುಷ- ಮಹಿಳಾ ಅಭ್ಯರ್ಥಿಗಳು ಇವುಗಳನ್ನು ಕೇಂದ್ರಗಳಿಗೆ ತೆಗೆದುಕೊಂಡು ಹೋಗುವ ಹಾಗಿಲ್ಲ

ನಾಳೆ ಕರ್ನಾಟಕದಲ್ಲೂ ನೀಟ್‌ ಪರೀಕ್ಷೆ, ಪುರುಷ- ಮಹಿಳಾ ಅಭ್ಯರ್ಥಿಗಳು ಇವುಗಳನ್ನು ಕೇಂದ್ರಗಳಿಗೆ ತೆಗೆದುಕೊಂಡು ಹೋಗುವ ಹಾಗಿಲ್ಲ

ಕರ್ನಾಟಕದಲ್ಲೂ ಮೇ 4ರ ಭಾನುವಾರ ನೀಟ್‌ ಪ್ರವೇಶ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಡ್ರೆಸ್‌ ಕೋಡ್‌ ಸಹಿತ ಪ್ರಮುಖ ಸೂಚನೆಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.

ನೀಟ್‌ ಪ್ರವೇಶ ಪರೀಕ್ಷೆ ಎದುರಿಸುವವರಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ.
ನೀಟ್‌ ಪ್ರವೇಶ ಪರೀಕ್ಷೆ ಎದುರಿಸುವವರಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ಕಿತ್ತು ಮೂರ್ನಾಲ್ಕು ಕಡೆ ವಿವಾದ ಸೃಷ್ಟಿಯಾಗಿ ತಪ್ಪೆಸಗಿದ ಅಧಿಕಾರಿಗಳು, ಸಿಬ್ಬಂದ ವಿರುದ್ದ ಶಿಸ್ತಿನ ಕ್ರಮ ಕೈಗೊಂಡ ಘಟನೆ ಹಸಿರುವಾಗಲೇ ಈಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಮೇ 4ರಂದು ‘ನೀಟ್‌’ (ಯುಜಿ) ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಗೆ ಬರುವ ಅಭ್ಯರ್ಥಿಗಳ ಡ್ರೆಸ್‌ಕೋಡ್‌ ಹೇಗಿರಬೇಕು. ಏನನ್ನೂ ಪರೀಕ್ಷಾ ಕೇಂದ್ರಕ್ಕೆ ತರಬೇಕು. ಪರೀಕ್ಷಾ ಕೇಂದ್ರಕ್ಕೆ ಏನೆಲ್ಲಾ ತರದೇ ಇದ್ದರೆ ಒಳ್ಳೆಯದು ಎನ್ನುವ ಮಾಹಿತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನೀಟ್‌ ಪ್ರವೇಶ ಪರೀಕ್ಷೆಗೆ ನಿಗದಿ ಮಾಡಲಾಗಿದೆ. ಭಾನುವಾರ ಒಂದೇ ದಿನ ಮೂರು ಗಂಟೆ ಕಾಲ ಪರೀಕ್ಷೆ ಇರಲಿದೆ.

ಸೂಚನೆಗಳು ಏನೇನು

ಪರೀಕ್ಷಾ ಕೇಂದ್ರಗಳಿಗಲ್ಲಿ ಬೆಳಿಗ್ಗೆ 11 ಗಂಟೆಯಿಂದಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದಲೇ ಪ್ರವೇಶಾತಿಗೆ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದಲೂ ತಪಾಸಣೆಯನ್ನು ನಡೆಸಲಾಗುವುದು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಡ್ಡಾಯವಾಗಿರುತ್ತದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಈಗಾಗಲೇ ಡೌನ್‌ಲೋಡ್‌ ಮಾಡಿಕೊಂಡಿರುವ ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ಪಾಲಿಸಬೇಕು.

ಡ್ರೆಸ್‌ ಕೋಡ್‌ ಹೇಗಿರಬೇಕು

ಅದರಲ್ಲೂ ಅಭ್ಯರ್ಥಿಗಳು ಪೂರ್ಣ ತೋಳಿರುವ ಮೇಲಂಗಿಯನ್ನು ಹಾಗೂ ದೊಡ್ಡ ಬಟನ್ ಗಳಿರುವ ಶರ್ಟ್ ಮತ್ತು ಪ್ಯಾಂಟ್ ಗಳನ್ನು, ಶೂ, ಸಾಕ್ಸ್, ಎತ್ತರದ ಚಪ್ಪಲಿಗಳು, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು (ಮಂಗಳ ಸೂತ್ರವನ್ನು ಹೊರತುಪಡಿಸಿ) ಧರಿಸುವಂತಿಲ್ಲ. ಜಡೆಗೆ ಹಾಕುವ ಕ್ಲಿಪ್ಸ್ ಹಾಗೂ ಯಾವುದೇ ರೀತಿಯ ಇಲೆಕ್ಟ್ರಾನಿಕ್ ಉಪಕರಣಗಳನ್ನು ಸಹ ಧರಿಸುವಂತಿಲ್ಲ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲಲ್ಪಟ್ಟಿರುವ ಐಡಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿ.ಎಲ್, ವೋಟರ್ ಐಡಿ ಹಾಗೂ ಪ್ರವೇಶ ಪತ್ರದಲ್ಲಿ ತಿಳಿಸಿರುವ ಇತರೆ ಯಾವುದಾದರೂ ಅಂಗೀಕೃತ ಐಡಿಗಳ ಜೊತೆ 01 ಪೋಸ್ಟ್ ಕಾರ್ಡ್ ಸೈಜ್ ಫೋಟೋ ಮತ್ತು 02 ಪಾಸ್ ಪೋರ್ಟ್ ಸೈಜ್ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಪರೀಕ್ಷೆಗೆ ಹಾಜರಾಗಬೇಕು

ತಪಾಸಣೆ ಕಡ್ಡಾಯ

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವತಿಯಿಂದ ನೀಡಲಾಗಿರುವ ಸೂಚನೆ ಹಾಗೂ ಉಪಕರಣಗಳನ್ನು ಅಳವಡಿಸಿರುವ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಖಚಿತಪಡಿಸಿಕೊಳ್ಳುವುದು ಕಡ್ಡಾಯ.

ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬ‌ರ್ ಇರುವ ಕೊಠಡಿಗೆ ನೇರವಾಗಿ ತೆರಳಲು ಅವಕಾಶವಿರುತ್ತದೆ. ಮಧ್ಯಾಹ್ನ 2:00 ರಿಂದ ಸಂಜೆ 5.00 ಗಂಟೆಯವರೆಗೆ ಪರೀಕ್ಷಾ ಕಾರ್ಯವು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುತ್ತದೆ.

ಕೇಂದ್ರದಲ್ಲಿ ಸೌಲಭ್ಯಕ್ಕೆ ಒತ್ತು

ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ ಒದಗಿಸಲಾಗುವುದು. ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಸ್ವಚ್ಛತೆಯನ್ನು ಸಹ ಕಾಪಾಡಲಾಗುವುದು

ಪರೀಕ್ಷೆಗೆ ಹಾಜರಾಗುವ ದಿವ್ಯಾಂಗ ಚೇತನ ಮಕ್ಕಳಿಗೆ ಅನುಕೂಲವಾಗುವಂತೆ ವೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿ ಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿರುತ್ತದೆ. ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ತಲುಪುವಂತೆ ಹೆಚ್ಚಿನ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗುವುದು.

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬ ಪೊಲೀಸ್ ವೃತ್ತ ನಿರೀಕ್ಷಕರು, ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ನಿಯೋಜಿತ ಸಿಬ್ಬಂದಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವಲ್ಲಿ ನಿಯಮಾನುಸಾರ ಅಗತ್ಯ ಕ್ರಮವಹಿಸಲಾಗುತ್ತದೆ.

ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಿಂದ ಪರೀಕ್ಷೆಗೂ ಮುನ್ನ ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿರುವ ಮೂಲಭೂತ ಸೌಕರ್ಯಗಳು, ಪರೀಕ್ಷಾ ಕೇಂದ್ರಗಳ ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ದಿನದಂದು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶಿಸುವಂತಿಲ್ಲ .

ಆಯಾ ಜಿಲ್ಲಾಡಳಿತದ ವತಿಯಿಂದ ಪರೀಕ್ಷಾ ಕೇಂದ್ರಗಳವಾರು ವೀಕ್ಷಕರು ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ದಿನದಂದು ಸೂಚಿಸಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ, ಅಶಿಸ್ತು, ಪ್ರಕರಣಗಳು ಜರುಗದಂತೆ ಮುಂಜಾಗ್ರತೆ ವಹಿಸಲಾಗುತ್ತದೆ ಎನ್ನುವುದು ಅಧಿಕಾರಿಗಳು ನೀಡುವ ವಿವರಣೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.