ಕರ್ನಾಟಕದ 381 ಕೇಂದ್ರಗಳಲ್ಲಿ ಇಂದು ನೀಟ್‌ ಪರೀಕ್ಷೆ, ಅಭ್ಯರ್ಥಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಗಮನಿಸಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದ 381 ಕೇಂದ್ರಗಳಲ್ಲಿ ಇಂದು ನೀಟ್‌ ಪರೀಕ್ಷೆ, ಅಭ್ಯರ್ಥಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಗಮನಿಸಿ

ಕರ್ನಾಟಕದ 381 ಕೇಂದ್ರಗಳಲ್ಲಿ ಇಂದು ನೀಟ್‌ ಪರೀಕ್ಷೆ, ಅಭ್ಯರ್ಥಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಗಮನಿಸಿ

ವೈದ್ಯಕೀಯ ಶಿಕ್ಷಣಕ್ಕೆ ಹೋಗ ಬಯಸುವವರಿಗೆ ನಡೆಸುವ ನೀಟ್‌ ಪರೀಕ್ಷೆಯು ಭಾನುವಾರ ನಡೆಯಲಿದೆ. ಕರ್ನಾಟಕದಲ್ಲೂ 381 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲೂ ನೀಟ್‌ ಪರೀಕ್ಷೆ ಭಾನುವಾರ ನಡೆಯಲಿದೆ.
ಕರ್ನಾಟಕದಲ್ಲೂ ನೀಟ್‌ ಪರೀಕ್ಷೆ ಭಾನುವಾರ ನಡೆಯಲಿದೆ.

ಬೆಂಗಳೂರು: ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳಿಗೆ ಹೋಗಬಯಸುವ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ಮಟ್ಟದಲ್ಲಿ ನಡೆಯುವ ರಾಷ್ಟ್ರೀಯ ಪ್ರವೇಶ ಪರೀಕ್ಷೆ ನೀಟ್‌ 2025 ಮೇ 4ರ ಭಾನುವಾರ ನಡೆಯಲಿದೆ. ಕರ್ನಾಟಕದಲ್ಲೂ 381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಕರ್ನಾಟಕ ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್​ ಪರೀಕ್ಷೆ ಬರೆಯಲಿದ್ದಾರೆ. ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ. ಅಲ್ಲದೇ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಬರಬೇಕು ಎಂದು ಸೂಚನೆ ನೀಡಲಾಗಿದೆ.

ಅಭ್ಯರ್ಥಿಗಳು ಪೂರ್ಣ ತೋಳಿರುವ ಮೇಲಂಗಿಯನ್ನು ಹಾಗೂ ದೊಡ್ಡ ಬಟನ್ ಗಳಿರುವ ಶರ್ಟ್ ಮತ್ತು ಪ್ಯಾಂಟ್ ಗಳನ್ನು, ಶೂ, ಸಾಕ್ಸ್, ಎತ್ತರದ ಚಪ್ಪಲಿಗಳು, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ. ಮಂಗಳ ಸೂತ್ರ ಬಳಸಲು ಅಡ್ಡಿಯಿಲ್ಲ. ಜಡೆಗೆ ಹಾಕುವ ಕ್ಲಿಪ್ಸ್ ಹಾಗೂ ಯಾವುದೇ ರೀತಿಯ ಇಲೆಕ್ಟ್ರಾನಿಕ್ ಉಪಕರಣಗಳನ್ನು ಸಹ ಧರಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲಲ್ಪಟ್ಟಿರುವ ಐಡಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿ.ಎಲ್, ವೋಟರ್ ಐಡಿ ಹಾಗೂ ಪ್ರವೇಶ ಪತ್ರದಲ್ಲಿ ತಿಳಿಸಿರುವ ಇತರೆ ಯಾವುದಾದರೂ ಅಂಗೀಕೃತ ಐಡಿಗಳ ಜೊತೆ 01 ಪೋಸ್ಟ್ ಕಾರ್ಡ್ ಸೈಜ್ ಫೋಟೋ ಮತ್ತು 02 ಪಾಸ್ ಪೋರ್ಟ್ ಸೈಜ್ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವತಿಯಿಂದ ನೀಡಲಾಗಿರುವ ಸೂಚನೆ ಹಾಗೂ ಉಪಕರಣಗಳನ್ನು ಅಳವಡಿಸಿರುವ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಖಚಿತಪಡಿಸಿಕೊಳ್ಳುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗಲ್ಲಿ ಬೆಳಿಗ್ಗೆ 11 ಗಂಟೆಯಿಂದಲೇ ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದಲೇ ಪ್ರವೇಶಾತಿಗೆ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದಲೂ ತಪಾಸಣೆಯನ್ನು ನಡೆಸಲಾಗುವುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಡ್ಡಾಯವಾಗಿರುತ್ತದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಈಗಾಗಲೇ ಡೌನ್‌ಲೋಡ್‌ ಮಾಡಿಕೊಂಡಿರುವ ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬ‌ರ್ ಇರುವ ಕೊಠಡಿಗೆ ನೇರವಾಗಿ ತೆರಳಲು ಅವಕಾಶವಿದೆ. ಮಧ್ಯಾಹ್ನ 2:00 ರಿಂದ ಸಂಜೆ 5.00 ಗಂಟೆಯವರೆಗೆ ಪರೀಕ್ಷಾ ಕಾರ್ಯವು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುತ್ತದೆ ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.

ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಿಂದ ಪರೀಕ್ಷೆಗೂ ಮುನ್ನ ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿರುವ ಮೂಲ ಸೌಕರ್ಯಗಳು, ಪರೀಕ್ಷಾ ಕೇಂದ್ರಗಳ ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ದಿನದಂದು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.