ಪಾಕಿಸ್ತಾನದ ವಿರುದ್ದ ಆಪರೇಷನ್ ಸಿಂದೂರ, ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ: ಮೀನುಗಾರರಿಗೆ ಎಚ್ಚರಿಕೆ
ಪಾಕಿಸ್ತಾನದ ಮೇಲೆ ಭಾರತದ ಸೇನೆ ಆಪರೇಷನ್ ಸಿಂದೂರ ಆರಂಭಿಸಿದ ನಂತರ ಕರ್ನಾಟಕದ ಕರಾವಳಿ ಭಾಗದಲ್ಲೂ ಹೈ ಅಲರ್ಟ್ ಘೋಷಿಸಲಾಗಿದ್ದು, ಆಳ ಮೀನುಗಾರಿಕೆಗೆ ಹೋಗುವವರಿಗೆ ಸೂಚನೆ ನೀಡಲಾಗಿದೆ.ವರದಿ: ಹರೀಶ ಮಾಂಬಾಡಿ,ಮಂಗಳೂರು

ಮಂಗಳೂರು:ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕೈಗೊಂಡಿರುವ ಕ್ರಮಗಳ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನ ಭಾರತದ ಮೇಲೆ ಕಿಡಿಗೇಡಿ ಕೃತ್ಯವೆಸಗುವ ಸಾಧ್ಯತೆಯ ಕಾರಣದಿಂದ ಮುಂಜಾಗರೂಕತಾ ಕ್ರಮವಾಗಿ ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ. ಕಾಶ್ಮೀರ ರಾಜ್ಯದ ಪೆಹಲ್ಗಾಮ್ ಪ್ರದೇಶದಲ್ಲಿ ಅಮಾನವೀಯವಾಗಿ ಭಯೋತ್ಪಾದಕರು ಸುಮಾರು 26 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಸಂದರ್ಭ ಉಗ್ರರ ನೆಲೆಯನ್ನು ಗುರಿಯಾಗಿಸಿ ದಾಳಿ ಮಾಡಲಾಗಿತ್ತು. ಗುರುವಾರ ಪಾಕಿಸ್ತಾನ ಅಪ್ರಚೋದಿತ ದಾಳಿಯನ್ನು ನಾಗರಿಕರನ್ನು ಗುರಿಯಾಗಿಸಿ ಮಾಡಲಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು.
ಇದೀಗ ಆಪರೇಷನ್ ಸಿಂದೂರ ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ ಹಡಗಿನಲ್ಲಿ ತೀವ್ರ ತಪಾಸಣೆ, ಮೀನುಗಾರಿಕಾ ಬೋಟ್ಗಳನ್ನು ತಪಾಸಣೆ ನಡೆಸಲಾಗುತ್ತಿದೆ. 12 ನಾಟಿಕನ್ ಮೈಲೂ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದ್ದು, ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಕರಾವಳಿ ಕಾವಲು ಪಡೆ ಕಟ್ಟೆಚ್ಚರ
ಮಂಗಳೂರಿನ ಕಡಲ ತೀರದಲ್ಲಿ ಕರಾವಳಿ ಕಾವಲು ಪಡೆಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಮಂಗಳೂರಿನ ಬಂದರು ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್ಗಳನ್ನು ತಪಾಸಣೆ ನಡೆಸಿ ಮೀನುಗಾರರ ದಾಖಲೆ ಪರಿಶಿಲಿಸಿದ್ರು. ಸದ್ಯ ಅನುಮಾನಾಸ್ಪದ ಬೋಟ್ಗಳ ಮೇಲೆ ನಿಗಾ ಇಟ್ಟಿರುವ ಪೊಲೀಸರು ತಪಾಸಣೆ ಮುಂದುವರಿಸಿದ್ದಾರೆ.
ಪಹಲ್ಗಾಮ್ ದಾಳಿ ಬೆನ್ನಲ್ಲೇ ದೇಶದ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. ದೇಶದ ಗಡಿಯೇ ಆಗಿರುವ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸ್ ಗಸ್ತು ಹೆಚ್ಚು ಮಾಡಿದೆ ಎನ್ನುತ್ತಾರೆ ಕರಾವಳಿ ಕಾವಲು ಪಡೆ ಎಸ್ಪಿ ಮಿಥುನ್.
ವರದಿ: ಹರೀಶ ಮಾಂಬಾಡಿ,ಮಂಗಳೂರು