ಬೆಂಗಳೂರು ಮಳೆಯಲ್ಲಿ ರಾಜಕೀಯ ಬೇಳೆ ಬೇಯಿಸುತ್ತಿರುವ ನಾಯಕರು; ಪರಿಹಾರ ನಗಣ್ಯ, ಕೆಸರೆರಚಾಟ ಮೇಲುಗೈ
ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಲ್ಲಿ ಮಳೆಯಿಂದಾದ ಸಮಸ್ಯೆಗಳು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಎಲ್ಲಾ ಪಕ್ಷಗಳ ಮುಖಂಡರು ಮಳೆಯಲ್ಲಿ ತಮ್ಮ ತಮ್ಮ ರಾಜಕೀಯ ಬೇಳೆಯನ್ನು ನೆನೆಸಿಕೊಳ್ಳುತ್ತಿದ್ದಾರೆ. (ವರದಿ- ಎಚ್.ಮಾರುತಿ)

ಬೆಂಗಳೂರು: ನಗರದಲ್ಲಿ ಕಳೆದ 3 ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ನಾಗರಿಕರು ಕಂಗಾಲಾಗಿದ್ದಾರೆ. ಈ ಸಮಸ್ಯೆಗೆ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ಪರಿಹಾರ ರೂಪಿಸುವ ಪ್ರಯತ್ನ ಮಾಡಬೇಕಿತ್ತು. ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಪ್ರತಿ ಪಕ್ಷಗಳು ರಚನಾತ್ಮಕ ಪರಿಹಾರ ಮಾರ್ಗಗಳನ್ನು ಸೂಚಿಸಬೇಕಿತ್ತು. ಎಲ್ಲಾ ಪಕ್ಷಗಳ ಮುಖಂಡರು ಮಳೆಯಲ್ಲಿ ತಮ್ಮ ತಮ್ಮ ರಾಜಕೀಯ ಬೇಳೆಯನ್ನು ನೆನೆಸಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ರಾಜಕಾರಣ ಮಾಡುತ್ತಿರುವುದು ಮಳೆಯಿಂದ ಸಂತ್ರಸ್ತರಾದವರಲ್ಲಿ ಕೋಪ ತರಿಸಿದೆ.
ಮಾನ್ಯತಾ ಟೆಕ್ ಪಾರ್ಕ್, ವೈಟ್ ಫೀಲ್ಡ್, ಯಲಹಂಕದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದಲೇ ಈ ಪ್ರಮಾಣದ ಹಾನಿಯಾಗಿದೆ. ಈ ಅವಘಡಕ್ಕೆ ಸರ್ಕಾರವೇ ಕಾರಣ ಎಂದು ಗುಡುಗಿದ್ದಾರೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಉದ್ಯಮಕ್ಕೆ ಅಡಿಗಲ್ಲು ಹಾಕಿದ್ದರು. ಆದರೆ ನಂತರ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರಗಳು ಐಟಿ ಉದ್ಯಮಕ್ಕೆ ಆದ್ಯತೆ ನೀಡುವುದಕ್ಕೆ ಬದಲಾಗಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಒಟ್ಟು ನೀಡುತ್ತಾ ಬಂದವು. ಈ ದಂಧೆಯ ಕಾರಣಕ್ಕೆ ಭೂಮಿಯ ಶೋಷಣೆ ನಡೆಯುತ್ತಾ ಹೋಯಿತು. ಮಳೆಯಿಂದ ಉಂಟಾಗುವ ಹಾನಿಗೆ ಕಾರಣವಾಯಿತು ಎಂದು ಜೆಡಿಎಸ್ ಟೀಕಿಸಿದೆ.
ಡಿಸಿಎಂ ಡಿಕೆಶಿ ಹೇಳಿದ್ದೇನು?
ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಕೃತಿಯನ್ನು ನಿಯಂತ್ರಿಸಲು ಅಸಾಧ್ಯ. ಸರ್ಕಾರ ಹಾನಿಯನ್ನು ನಿಯಂತ್ರಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಟೀಕೆಗಾಗಿ ಟೀಕಿಸುತ್ತಾ ಬೆಂಗಳೂರಿನ ಗೌರವವನ್ನು ಹಾಳು ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ತೊಂದರೆಯೂ ಆಗಿದೆ. ಸರ್ಕಾರ ಆದ್ಯತೆಯ ಮೇರೆಗೆ ಸಮಸ್ಯೆಗಳನ್ನು ಬಗೆ ಹರಿಸಲು ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಮಳೆ ಸುರಿಯುತ್ತಿರುವ ವಿಷಯವನ್ನೇ ಹಿಡಿದುಕೊಂಡು ಪ್ರತಿಪಕ್ಷಗಳು ಬೆಂಗಳೂರಿನ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತಿವೆ. ಇದು ಸರಿಯಲ್ಲ. ಸರ್ಕಾರ ಎಲ್ಲ ಸಮಸ್ಯೆಗಳಿಗೂ ಪರಿಹಾರ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ. ಮತ್ತಷ್ಟು ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರ ವಹಿಸಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ರಜೆಯನ್ನು ನೀಡಲಾಗಿತ್ತು. ಪಾಲಿಕೆ, ಪೊಲೀಸ್ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸನ್ನದ್ಧವಾಗಿದ್ದಾರೆ ಎಂದು ಹೇಳಿದ್ದಾರೆ.
ಮಳೆಯನ್ನು ವಾಪಸ್ ಕಳುಹಿಸಲು ಸಾಧ್ಯವೇ?
ಗೃಹ ಸಚಿವ ಡಾ. ಜಿ ಪರಮೇಶ್ವರ ಅವರೂ ಇದೇ ಧಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಳೆಯನ್ನು ವಾಪಸ್ ಕಳುಹಿಸಲು ಸಾಧ್ಯವೇ ಎಂದು ಕೇಳಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಘೋಷಣೆ ವಾಪಸ್ ಪಡೆಯಿರಿ, ಇಲ್ಲವಾದರೆ ಅನುದಾನ ಬಿಡುಗಡೆ ಮಾಡಿ ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಅಗ್ರಹಪಡಿಸಿದ್ದಾರೆ. ಬೆಳ್ಳಂದೂರು, ಮಹದೇವಪುರ ಮೊದಲಾದ ಕಡೆ ಮಳೆಯಿಂದ ಹಾನಿಯಾಗಿದೆ. ಇಂತಹ ಸಮಯದಲ್ಲೂ ಬ್ರ್ಯಾಂಡ್ ಬೆಂಗಳೂರು ಎನ್ನುತ್ತಿದ್ದಾರೆ. ಆದರೆ ಕೇವಲ ಸದ್ದು ಕೇಳಿ ಬರುತ್ತಿದ್ದು, ಬ್ರ್ಯಾಂಡ್ ಬದಲು ಬ್ಯಾಂಡ್ ಬೆಂಗಳೂರು ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಅವಧಿಯಲ್ಲಿ ರಾಜಾ ಕಾಲುವೆಗಳನ್ನು ಸ್ವಚ್ಛಗೊಳಿಸಲು 800 ಕೋಟಿ ರೂಪಾಯಿ ಮೀಸಲಿಟ್ಟಿದ್ದರು. ನಂತರ ಬಂದ ಕಾಂಗ್ರೆಸ್ ಸರ್ಕಾರ ಮಾರಾಟ ಬಿಟ್ಟಿತು. ಈಗಲಾದರೂ ರಾಜಾ ಕಾಲುವೆಗಳ ಒತ್ತುವರಿ ತೆರವುಗೊಳಿಸಿ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.