Reservation: ಶಿಕ್ಷಣ-ಉದ್ಯೋಗದಲ್ಲಿ ಎಸ್ಸಿ-ಎಸ್ಟಿಗೆ ಮೀಸಲಾತಿ ಹೆಚ್ಚಳ, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ, ಪ್ರತಿಪಕ್ಷಗಳಿಗೆ ಸಿಎಂ ಟಾಂಗ್
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕಾಯ್ದೆ ಇದಾಗಿದೆ.
ಬೆಂಗಳೂರು: ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022 ಅನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಅವರು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕಾಯ್ದೆ ಇದಾಗಿದೆ.
ಈ ಕಾಯ್ದೆಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಯವರಿಗೆ ಮೀಸಲಾತಿ ಪ್ರಮಾಣ ಶೇ. 15 ರಿಂದ ಶೇ. 17 ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ.
ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆಯನ್ನು ಸಂವಿಧಾನದ 9ನೆ ಶೆಡ್ಯೂಲ್ ಗೆ ಸೇರಿಸುವ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಅವಕಾಶ ವಂಚಿತ ಸಮುದಾಯಗಳ ಕುರಿತು ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನ ವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಕುರಿತು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಪ್ರತಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ. "ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಳದ ಬಗ್ಗೆ ನಮಗಿರುವ ಬದ್ಧತೆಯನ್ನು ಪ್ರಶ್ನಿಸುತ್ತಿರುವವರು ಒಮ್ಮೆ ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲೇಬೇಕು. ಶೋಷಿತ ವರ್ಗಗಳು 40 ವರ್ಷಗಳಿಂದ ನಿಮ್ಮೆದುರು ಆಸೆ, ನಿರೀಕ್ಷೆ, ಭರವಸೆಗಳಿಂದ ಕೈಯೊಡ್ಡಿ ನಿಂತಿದ್ದವು" ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
"ಬಾಯಿ ಮಾತಿನ ಭರವಸೆ ಕೊಟ್ಟು-ಕೊಟ್ಟು ಓಟು ಒತ್ತಿಸಿಕೊಂಡವರು ನೀವು, ಯಾವ ಭರವಸೆ ಕೊಡದಿದ್ದರೂ ಮೀಸಲಾತಿ ಹೆಚ್ಚಳ ಮಾಡಿ ಅವರ ಬದುಕಿಗೆ ಬೆಳಕಾದವರು ನಾವು. ಹೆಚ್ಚಿಸಲಾಗಿರುವ ಮೀಸಲಾತಿಯ ಲಾಭಗಳನ್ನು ಈಗಾಗಲೇ ಶೋಷಿತ ಸಮುದಾಯಗಳು ಪಡೆಯುತ್ತಿವೆ" ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
"ರಾಜ್ಯದಲ್ಲಿ ಪರಿಶಿಷ್ಟ ಜಾತಿ ಯವರಿಗೆ ಮೀಸಲಾತಿ ಪ್ರಮಾಣ ಶೇ. 15 ರಿಂದ ಶೇ. 17 ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆಯನ್ನು ಸಂವಿಧಾನದ 9 ನೇ ಶೆಡ್ಯೂಲ್ ಗೆ ಸೇರಿಸುವ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅವಕಾಶ ವಂಚಿತ ಸಮುದಾಯಗಳ ಕುರಿತು ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನವಾಗಿದೆ. ಉಳಿದ ಸಾಂವಿಧಾನಿಕ ಪ್ರಕ್ರಿಯೆಗಳು ಜಾರಿಯಲ್ಲಿವೆ. ಜನ ಜಾಣರಿದ್ದಾರೆ. ನಿಮ್ಮ ಆರೋಪಗಳು ಕಂಠ ಶೋಷಣೆಗೆ ಮಾತ್ರ." ಎಂದು ಬೊಮ್ಮಾಯಿ ಪ್ರತಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ. 15 ರಿಂದ ಶೇ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ ಶೇ.7ಕ್ಕೆ ಹೆಚ್ಚಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಕಳೆದ ಡಿಸೆಂಬರ್ನಲ್ಲಿ ಅಂಗೀಕರಿಸಲಾಗಿತ್ತು.
6 ತಿಂಗಳೊಳಗೆ ಈ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬ ಸಲಹೆಯನ್ನು ನಾಗಮೋಹನ್ ದಾಸ್ ನೀಡಿದ್ದರು. ಅದರ ಅನ್ವಯ ಈ ಅಧಿವೇಶನದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡಿಸಿ, ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಇದೀಗ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.