ರಸ್ತೆ ಅಪಘಾತ, ಆತ್ಮಹತ್ಯೆ; ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳ ಸಾವು
shivamogga crime news: ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ: ಎಲ್ಲವೂ ಅಂದುಕೊಂಡಂತೆ ಹಾಗಿದಿದ್ದರೆ ಇವತ್ತು (ಮಾರ್ಚ್ 25, ಸೋಮವಾರ) ಈ ಇಬ್ಬರು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ವಿಧಿಯಾಟದ ಮುಂದೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಭದ್ರಾವತಿ ತಾಲೂಕಿನಲ್ಲಿ ಓರ್ವ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿದ್ದರೆ, ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎರಡೂ ಘಟನೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿವೆ.
ಭದ್ರಾವತಿ ತಾಲೂಕಿನ ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮೈ ಖುಲ್ಸುಂ ಎಂಬುವರು ಮೂಡಲ ವಿಠಲಾಪುರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಸಲುವಾಗಿ ಒಂದು ದಿನ ಮೊದಲೇ (ಮಾರ್ಚ್ 24, ಭಾನುವಾರ) ತಮ್ಮ ಸಂಬಂಧಿಕರ ಮನೆಗೆ ಹೋಗಲು ರಸ್ತೆ ದಾಟುವಾಗ ಚನ್ನಗಿರಿಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 16 ವರ್ಷದ ವಿದ್ಯಾರ್ಥಿ ಉಮೈ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಬಾಲಕ ಸ್ಥಳೀಯ ಶಾಲೆಯೊಂದರ ಎಸ್ಎಸ್ಎಸ್ಸಿ ವಿದ್ಯಾರ್ಥಿಯಾಗಿದ್ದು, ಇಂದು ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಪರೀಕ್ಷೆ ಮುನ್ನ ದಿನವೇ ತಮ್ಮ ಮನೆಯ ಹಿತ್ತಲಿನಲ್ಲಿದ್ದ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು 8.69 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಕರ್ನಾಟಕದಲ್ಲಿ ಇಂದಿನಿಂದ (ಮಾರ್ಚ್ 25, ಸೋಮವಾರ) ಏಪ್ರಿಲ್ 6ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, 2,750 ಪರೀಕ್ಷಾ ಕೇಂದ್ರಗಳಲ್ಲಿ ಬೋರ್ಡ್ ಪರೀಕ್ಷೆ ನಡೆಯುತ್ತಿದೆ. ಈ ಬಾರಿ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 4,28,058 ಬಾಲಕಿಯರು, 4,41,910 ಬಾಲಕರು ಇದ್ದಾರೆ. 8,10,368 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯುತ್ತಿದ್ದರೆ, 18,225 ಖಾಸಗಿ ವಿದ್ಯಾರ್ಥಿಗಳು, ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳ ಸೇರಿದ್ದಾರೆ. ವಿಭಿನ್ನ ಸಾಮರ್ಥ್ಯವುಳ್ಳ 5,424 ವಿದ್ಯಾರ್ಥಿಗಳ ಕೂಡ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
