Na D'Souza: ಹಿರಿಯ ಸಾಹಿತಿ ನಾ ಡಿಸೋಜ ನಿಧನ, ನಾಳೆ ಅಂತಿಮ ದರ್ಶನಕ್ಕೆ ಅವಕಾಶ; ಅವರ ಸಾಧನೆಯ ಹಾದಿ ಹೀಗಿದೆ
ಕನ್ನಡ ಸುದ್ದಿ  /  ಕರ್ನಾಟಕ  /  Na D'souza: ಹಿರಿಯ ಸಾಹಿತಿ ನಾ ಡಿಸೋಜ ನಿಧನ, ನಾಳೆ ಅಂತಿಮ ದರ್ಶನಕ್ಕೆ ಅವಕಾಶ; ಅವರ ಸಾಧನೆಯ ಹಾದಿ ಹೀಗಿದೆ

Na D'Souza: ಹಿರಿಯ ಸಾಹಿತಿ ನಾ ಡಿಸೋಜ ನಿಧನ, ನಾಳೆ ಅಂತಿಮ ದರ್ಶನಕ್ಕೆ ಅವಕಾಶ; ಅವರ ಸಾಧನೆಯ ಹಾದಿ ಹೀಗಿದೆ

ವಯೋಸಹಜ ಕಾಯಿಲೆಯಿಂದ ಕರ್ನಾಟಕದ ಹಿರಿಯ ಸಾಹಿತಿ ನಾ ಡಿಸೋಜ ಅವರು ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Na. D'Souza Passes Away: ಹಿರಿಯ ಸಾಹಿತಿ ನಾ ಡಿಸೋಜಾ ನಿಧನ
Na. D'Souza Passes Away: ಹಿರಿಯ ಸಾಹಿತಿ ನಾ ಡಿಸೋಜಾ ನಿಧನ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಕರ್ನಾಟಕದ ಹಿರಿಯ ಸಾಹಿತಿ ನಾ ಡಿಸೋಜ ಅವರು ತಮ್ಮ 87ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪುತ್ರ ನವೀನ್ ನಾ ಡಿಸೋಜ ಅವರು ಫೇಸ್​​ಬುಕ್​​ ಪೋಸ್ಟ್​ ಮೂಲಕ ಖಚಿತಪಡಿಸಿದ್ದಾರೆ. ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ಡಾ. ನಾ ಡಿಸೋಜ ಅವರು ಇಂದು (05.01.2025) ಸಂಜೆ 7.50ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ (ಜ.6) ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು. ಇಂತಿ ಅವರ ಕುಟುಂಬ ಎಂದು ನವೀನ್ ಅವರು ತಮ್ಮ ಪೋಸ್ಟ್​​ನಲ್ಲಿ ಬರೆದಿದ್ದಾರೆ.

ನಾ. ಡಿಸೋಜ ಜೀವನ

ನಾ. ಡಿಸೋಜ ಅವರು ಜನಿಸಿದ್ದು 1937ರ ಜೂನ್ 6ರಂದು. ಹುಟ್ಟಿದ ಸ್ಥಳ ಶಿವಮೊಗ್ಗದ ಸಾಗರ. ತಂದೆ ಫಿಲಿಪ್ ಡಿಸೋಜ, ತಾಯಿ ರೂಪೀನಾ ಡಿಸೋಜ. ಮಕ್ಕಳು ಶೋಭಾ, ನವೀನ್, ಸಂತೋಷ್. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದ ನಾ. ಡಿಸೋಜ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯ ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ತಮ್ಮೆಲ್ಲಾ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತಾ ಬಂದಿದ್ದರು. ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನು ಉಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಅನೇಕ ಬಾರಿ ಪ್ರಸ್ತಾಪಿಸಿದ್ದರು.

ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದರು. ತಮ್ಮ ತಂದೆಯವರು ಶಾಲಾ ಮಕ್ಕಳಿಗೆ ಕಲಿಸಲೆಂದು ಬರೆದುಕೊಂಡಿದ್ದ ಪುಸ್ತಕಗಳಲ್ಲಿನ ಪದ್ಯಗಳನ್ನು ಕಲಿಯುವುದರ ಮೂಲಕ ಡಿಸೋಜ ಸಾಹಿತ್ಯಾಸಕ್ತಿ ಮೊಳಕೆಯೊಡೆಯತೊಡಗಿತ್ತು. ಜತೆಗೆ ತಾಯಿ ಹೇಳುತ್ತಿದ್ದ ಜನಪದ ಗೀತೆಗಳು, ಕಥೆಗಳು ಡಿಸೋಜರ ಮನಸ್ಸಿನ ಮೇಲೆ ಮೋಡಿ ಮಾಡತೊಡಗಿದ್ದವು. ಹೈಸ್ಕೂಲಿನಲ್ಲಿದ್ದಾಗಲೇ ಇವರ ಸಾಹಿತ್ಯಾಸಕ್ತಿ ಗಮನಿಸಿ, ಬೆಳೆಸಿದವರು ಗೊರೂರು ನರಸಿಂಹಾಚಾರ್ಯರರು. ಶಿವಮೊಗ್ಗದಲ್ಲಿ ಇಂಟರ್‌ ಮೀಡಿಯೇಟ್ ಕಾಲೇಜು (ಈಗಿನ ಸಹ್ಯಾದ್ರಿ ಕಾಲೇಜು) ಸೇರಿದರಾದರೂ ಇವರು ಪ್ರತಿಭೆ ತೋರಿಸಿದ್ದು ಕನ್ನಡ ವಿಷಯದಲ್ಲಿ ಉತ್ತಮ ಅಂಕಗಳನ್ನು ಪಡೆಯುವುದರಲ್ಲಿ. ಮೈಸೂರಿಗೆ ಹೋಗಿ ಕಾಲಕಳೆದದ್ದೆಲ್ಲಾ ಸಾರ್ವಜನಿಕ ಪುಸ್ತಕ ಭಂಡಾರಗಳಲ್ಲಿ. 

ಮಾಸ್ತಿ, ಕುವೆಂಪು, ಅನಕೃ, ಕಾರಂತರು, ಗೋಕಾಕ್, ಗೊರೂರು ಇವರಲ್ಲದೆ ಪರ್ಲ್‌ಬಕ್, ಸಾಮರ್ ಸೆಟ್ ಮಾಮ್, ಡಿಕನ್ಸ್ ಮುಂತಾದವರ ಕೃತಿಗಳನ್ನು ವ್ಯಾಪಕವಾಗಿ ಅಧ್ಯಯನ ನಡೆಸಿದ್ದರು. ಡಿಸೋಜ ಅವರು ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳಲ್ಲಿ ಯಶಸ್ವಿಯಾಗಿದ್ದು ಅವರ ವೃತ್ತಿ ಬದುಕಿಗೊಂದು ಆಸರೆಯಾಯಿತು. ಡಿಸೋಜ ಅವರು ಉದ್ಯೋಗಕ್ಕೆ ಸೇರಿದ್ದು ಲೋಕೋಪಯೋಗಿ ಇಲಾಖೆಯಲ್ಲಿ ಟೈಪಿಸ್ಟ್ ಮತ್ತು ದ್ವಿತೀಯ ದರ್ಜೆ ಗುಮಾಸ್ತರಾಗಿ. ನಂತರ ಪ್ರಥಮ ದರ್ಜೆ ಗುಮಾಸ್ತರಾಗಿ ಶರಾವತಿ ಯೋಜನೆ ಕಾರ್ಗಲ್, ಮಾಸ್ತಕಟ್ಟೆ, ತೀರ್ಥಹಳ್ಳಿ ಮುಂತಾದೆಡೆಗಳಲ್ಲಿ ಕಾರ್ಯನಿರ್ವಹಿಸಿ 1995ರಲ್ಲಿ ನಿವೃತ್ತಿ ಹೊಂದಿದ್ದರು.

ಡಿಸೋಜ ಕಥಾ ಲೋಕ

ಡಿಸೋಜ ಮೊದಲಿಗೆ 'ಪ್ರಪಂಚ' ಪತ್ರಿಕೆಗೆ ಕಥೆಗಳನ್ನು ಬರೆಯತೊಡಗಿದರು. ನಂತರ ಎಲ್ಲ ಪ್ರಮುಖ ಪತ್ರಿಕೆಗಳಲ್ಲೂ ಇವರ ಕಥೆಗಳು ಪ್ರಕಟವಾಗತೊಡಗಿದವು. ಡಿಸೋಜ ಅವರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟವಾದದ್ದು 1964ರಲ್ಲಿ. ನಂತರ ಮಂಜಿನ ಕಾನು, ಈ ನೆಲ ಈಜಲ, ಕೆಂಪು ತ್ರಿಕೋನ, ನೆಲೆ, ಮಾನವ.. ಹೀಗೆ ಇವರು ಬರೆದಿರುವ ಕಾದಂಬರಿಗಳು ಸುಮಾರು 40. ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ ಹೀಗೆ ಹಲವು ಹತ್ತು ವಿಷಯಗಳನ್ನು ಒಳಗೊಂಡ ಅವರ ಕಾದಂಬರಿಗಳು ಓದುಗರ ಮನಸೂರೆಗೊಂಡಿವೆ. ಇವರು ಪತ್ರಿಕೆಗಳಿಗೆ ಬರೆದ ಸಣ್ಣ ಕಥೆಗಳ 9 ಸಂಕಲನಗಳಲ್ಲಿ ಸಂಕಲಿತಗೊಂಡಿದ್ದು, ಸಮಗ್ರ ಕಥೆಗಳು 2 ಸಂಪುಟಗಳಲ್ಲಿ ಪ್ರಕಟವಾಗಿವೆ.

ಚಲನಚಿತ್ರಗಳಾದ ಕಾದಂಬರಿಗಳು

ನಾಡಿಗೆ ಬೆಳಕನ್ನು ನೀಡಲು ಪ್ರಾರಂಭಿಸಿದ ವಿದ್ಯುಚ್ಛಕ್ತಿ ಯೋಜನೆಯ ಅಡಿಯಲ್ಲಿ ಬಹಳಷ್ಟು ಜನರ ಬದುಕುಗಳು ಕತ್ತಲೆಯಲ್ಲಿ ಕರಗಿ ಹೋಗುವ ವಸ್ತುವನ್ನಾಗಿ ಉಳ್ಳ ‘ಮುಳುಗಡೆ’ ಕಾದಂಬರಿಯು ಸುಧಾ ಯುಗಾದಿ ಕಾದಂಬರಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿತ್ತು. ಸುರೇಶ್ ಹೆಬ್ಲೀಕರ್‌ ಅವರ ನಿರ್ದೇಶನದಲ್ಲಿ ‘ಕಾಡಿನ ಬೆಂಕಿ’, ಗಿರೀಶ್ ಕಾಸರವಳ್ಳಿ ಅವರ ನಿರ್ದೇಶನದಲ್ಲಿ ‘ದ್ವೀಪ (ಚಲನಚಿತ್ರ)’, ಸಿರಿಗಂಧ ಶ್ರೀನಿವಾಸಮೂರ್ತಿ ಅವರ ನಿರ್ದೇಶನದಲ್ಲಿ ‘ಬಳುವಳಿ’, ಕೋಡ್ಲು ರಾಮಕೃಷ್ಣ ಅವರ ನಿರ್ದೇಶನದಲ್ಲಿ ‘ಬೆಟ್ಟದಪುರದ ದಿಟ್ಟ ಮಕ್ಕಳು’ ಮತ್ತು ಮನು ಅವರ ನಿರ್ದೇಶನದಲ್ಲಿ ‘ಆಂತರ್ಯ’ ಕಾದಂಬರಿಗಳು ಚಲನಚಿತ್ರಗಳಾಗಿಯೂ ಜನಪ್ರಿಯತೆಯನ್ನು ಪಡೆದಿವೆ. ಇವುಗಳಲ್ಲಿ 'ಕಾಡಿನ ಬೆಂಕಿ' ಚಿತ್ರ ರಜತ ಕಮಲ ಪ್ರಶಸ್ತಿಯನ್ನೂ, 'ದ್ವೀಪ' ಚಿತ್ರ 'ಸ್ವರ್ಣ ಕಮಲ' ಪ್ರಶಸ್ತಿಯನ್ನೂ ಗಳಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಿರಿಮೆ ಗಳಿಸಿವೆ. ದೂರದರ್ಶನ ಮಾಧ್ಯಮದಲ್ಲಿ ಸಹ ಮಕ್ಕಳ ಧಾರವಾಹಿ, ಕಥೆಗಳು, ಹಲವಾರು ಕಾದಂಬರಿಗಳು ನಾಟಕಕ್ಕೆ ರೂಪಾಂತರವಾಗಿ ಪ್ರದರ್ಶಿತವಾಗಿವೆ.

ಪಠ್ಯಪುಸ್ತಕಗಳಲ್ಲಿ ಡಿಸೋಜಾ ಕಾದಂಬರಿಗಳು

ಡಿಸೋಜಾ ಅವರ ‘ಮುಳುಗಡೆ’, ‘ಕೊಳಗ’, ‘ಒಳಿತನ್ನು ಮಾಡಲು ಬಂದವರು’, ‘ಬಣ್ಣ’, ‘ಪಾದರಿಯಾಗುವ ಹುಡುಗ’, ‘ಇಬ್ಬರು ಮಾಜಿಗಳು’ ಮುಂತಾದ ಕಾದಂಬರಿಗಳು ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗದ ಬಿಎಸ್ಸಿ, ಬಿಕಾಂ ತರಗತಿಗಳಿಗೆ, ಬೆಂಗಳೂರು ವಿಶ್ವವಿದ್ಯಾಲಯದ ಬಿಎ ತರಗತಿಗಳಿಗೆ, ಮಂಗಳೂರು ವಿಶ್ವವಿದ್ಯಾನಿಲಯದ ಬಿಕಾಂ ತರಗತಿಗಳಿಗೆ ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವೂ ಸೇರಿದಂತೆ ಹಲವೆಡೆ ಪಠ್ಯಪುಸ್ತಕಗಳಾಗಿಯೂ ಆಯ್ಕೆಯಾಗಿದೆ. ವಿಶೇಷವಾಗಿ ಮಕ್ಕಳ ಸಾಹಿತ್ಯದಲ್ಲಿ ಕೃಷಿ ಮಾಡಿರುವ ಡಿಸೋಜ ಮಕ್ಕಳ ಸಾಹಿತ್ಯದ ವಿವಿಧ ಪ್ರಕಾರದಲ್ಲಿ 12  ಕೃತಿಗಳನ್ನು ಪ್ರಕಟಿಸಿದ್ದಾರೆ. ಡಿಸೋಜ ಅವರ ಹಲವಾರು ಸಣ್ಣ ಕಥೆಗಳು ಕೊಂಕಣಿ, ಮಲಯಾಳಂ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿವೆ. ತುಂಜಾಲು ಕಾದಂಬರಿಯು ತೆಲುಗು ಭಾಷೆಗೆ, ಪ್ರೀತಿಯೊಂದೇ ಸಾಲದೆ, ಜಲಪಾತದ ಸುತ್ತ, ಇಗರ್ಜಿ ಸುತ್ತಲಿನ ಹತ್ತು ಮನೆಗಳು, ಕಾಡಿನ ಬೆಂಕಿ, ತಿರುವು ಮುಂತಾದ ಕಾದಂಬರಿಗಳು ಕೊಂಕಣಿಗೆ, ಇಗರ್ಜಿ ಕಾದಂಬರಿ, ದ್ವೀಪ, ಬಾಲಗಂಧರ್ವ ಮತ್ತು ಏಸುಕ್ರಿಸ್ತ ಕೃತಿಗಳು ಇಂಗ್ಲಿಷ್‌ಗೂ, ನೇತ್ರಾಣಿ ಗುಡ್ಡಕ್ಕೆ ಯಾತ್ರೆ ಕೃತಿಯು ಹಿಂದಿ ಭಾಷೆಗೂ ಅನುವಾದಗೊಂಡಿದೆ.

ಡಿಸೋಜ ಅವರ ಸಾಹಿತ್ಯ ಕುರಿತು ಮದರಾಸು ವಿಶ್ವವಿದ್ಯಾಲಯದ ಪ್ರಕಾಶ್ ಸೈಮನ್‌ ಅವರು ‘ನಾ. ಡಿಸೋಜ ಅವರ 25 ಕಥೆಗಳು ಒಂದು ಅಧ್ಯಯನ’ ಕುರಿತು ಎಂಫಿಲ್ ಪದವಿ (1995), ಮಧುರೆ ಕಾಮರಾಜ ವಿಶ್ವವಿದ್ಯಾಲಯದ ಎಂಎಂ ಮಂಜುನಾಥ ಅವರು ‘ನಾ. ಡಿಸೋಜ ಅವರ ಕಾದಂಬರಿಗಳಲ್ಲಿ ಮುಳುಗಡೆ ಸಮಸ್ಯೆ – ಒಂದು ಅಧ್ಯಯನ’ ಮಹಾಪ್ರಬಂಧಕ್ಕೆ ಎಂಫಿಲ್ ಪದವಿ (1995), ಕುವೆಂಪು ವಿಶ್ವವಿದ್ಯಾಯದ ಟಿಎಸ್ ಶೈಲಾ ಅವರು ‘ನಾ. ಡಿಸೋಜ ಅವರ ಕಾದಂಬರಿಗಳಲ್ಲಿ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಮಹಾ ಪ್ರಬಂಧಕ್ಕೆ ಎಂಫಿಲ್ ಪದವಿ (2001) ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗಂಗಾ ಮೂಲಿಮನಿ ಅವರು ‘ನಾ. ಡಿಸೋಜ ಒಂದು ಸಾಂಸ್ಕೃತಿಕ ಅಧ್ಯಯನ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ (2001) ಪಡೆದಿದ್ದಾರೆ.

ನಾ. ಡಿಸೋಜ ಅವರು ಕರ್ನಾಟಕ ಸಾಹಿತ್ಯ ಅಕಾಡಮಿ, ಕೊಂಕಣಿ ಸಾಹಿತ್ಯ ಅಕಾಡಮಿ, ಪುಸ್ತಕ ಪ್ರಾಧಿಕಾರ, ಕುವೆಂಪು ವಿಶ್ವವಿದ್ಯಾಲಯದ ಸೆನೆಟ್, ಹಂಪಿ ಕನ್ನಡ ವಿಶ್ವವಿದ್ಯಾಲಯದ ಸೆನೆಟ್, ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆಡಳಿತ ಪರಿಷತ್, ಕುವೆಂಪು ರಂಗ ಮಂದಿರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂತಾದ ಸಂಸ್ಥೆಗಳಲ್ಲಿ ಸದಸ್ಯರಾಗಿ ಅಮೂಲ್ಯ ಸಲಹೆಗಳನ್ನು ಹಂಚಿಕೊಂಡಿದ್ದಾರೆ.

ಡಿಸೋಜಾ ಅವರಿಗೆ ಸಂದಿರುವ ಪ್ರಶಸ್ತಿ ಮತ್ತು ಪುರಸ್ಕಾರಗಳು

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ - 1988, 1993

ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ - 1988

ಅಖಿಲ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ - 1997

ಸಂದೇಶ್ ಸಾಹಿತ್ಯ ಪ್ರಶಸ್ತಿ - 1998

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ - 1998

ಮಂಗಳೂರು ಸಂದೇಶ ಪ್ರಶಸ್ತಿ - 1998

ನವದೆಹಲಿ ಕಳಾ ಪ್ರಶಸ್ತಿ - 1998

ಪುತ್ತೂರು ನಿರಂಜನ ಸಾಹಿತ್ಯ ಪ್ರಶಸ್ತಿ - 2003

ಆಳ್ವಾಸ್ ನುಡಿಸಿರಿ ಪ್ರಶಸ್ತಿ - 2006

ಭಟ್ಕಳ ತಾಲ್ಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ - 2006

ವರ್ಧಮಾನ ಪ್ರಶಸ್ತಿ - 2006

ಮುಂಬೈ ಅಖಿಲ ಭಾರತ ಸಂಸ್ಕೃತಿ ಸಮ್ಮೇಳನದ ಅಧ್ಯಕ್ಷತೆ - 2006

ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ - 2007

ಚಿತ್ರದುರ್ಗದ ಬೃಹನ್ಮಠದ ಡಾ. ಶಿವಮೂರ್ತಿ ಮುರುಘ ಶರಣ ಪ್ರಶಸ್ತಿ - 2011

ಮಾಸ್ತಿ ಪ್ರಶಸ್ತಿ - 2012

ಕೇಂದ್ರ ಸಾಹಿತ್ಯ ಅಕಾಡಮಿ ಬಾಲ ಸಾಹಿತ್ಯ ಪುರಸ್ಕಾರ - 2011

80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು-ಕೊಡಗು 2014

ಪಂಪ ಪ್ರಶಸ್ತಿ - 2023-24

(ಸಂಪೂರ್ಣ ಮಾಹಿತಿ- ವಿಕಿಪೀಡಿಯ)

Whats_app_banner