ಭಾರತೀಯ ಸೇನೆ ಬೆಂಬಲಿಸಿ ಮೈಸೂರಿನಲ್ಲಿ ಬೃಹತ್ ರಕ್ತದಾನ ಶಿಬಿರ: ಶಾಸಕ ತನ್ವೀರ್ ಸೇಠ್ ಆಯೋಜನೆ
ಎನ್ಆರ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಬೀಡಿ ಕಾರ್ಮಿಕರ ಕಾಲೋನಿಯ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಿದ ಶಾಸಕ ತನ್ವೀರ್ ಸೇಠ್

ಮೈಸೂರು: ಪಾಕಿಸ್ತಾನದ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯನ್ನು ಬೆಂಬಲಿಸಿ ಮೈಸೂರಿನಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಎನ್ ಆರ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಬೀಡಿ ಕಾರ್ಮಿಕರ ಕಾಲೋನಿಯ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸ್ಥಳೀಯ ಶಾಸಕ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ರಕ್ತದಾನ ಶಿಬಿರದಲ್ಲಿ ಧರ್ಮಾತೀತವಾಗಿ ನೂರಾರು ಜನರು ಭಾಗಿಯಾಗಿ, ಸ್ವಯಂ ಪ್ರೇರಿತರಾಗಿ ರಕ್ತ ಕೊಟ್ಟು ದೇಶ ಪ್ರೇಮ ಮೆರೆದರು. ದೇಶಕ್ಕೆ ರಕ್ತ ಅಲ್ಲ ಪ್ರಾಣವನ್ನೇ ಕೊಡುತ್ತೇವೆ, ದೇಶ ನಮಗೆ ಎಲ್ಲವನ್ನೂ ಕೊಟ್ಟಿದೆ, ದೇಶಕ್ಕಾಗಿ ನಾವು ಏನು ಬೇಕಾದರೂ ಮಾಡಲು ಸಿದ್ದ ಎಂದು ನೆರೆದಿದ್ದ ಸಾರ್ವಜನಿಕರು ಈ ಸಂದರ್ಭದಲ್ಲಿ ಹೇಳಿದರು.
ಕದನ ವಿರಾಮ ಘೋಷಣೆಗೆ ದೇಶದಲ್ಲಿ ಪರ ವಿರೋಧ ಚರ್ಚೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ, ಹಾಲಿ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಆ ವಿಚಾರವಾಗಿ ಟೀಕೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಕದನ ವಿರಾಮ ಘೋಷಣೆ ಕುರಿತು ಉಭಯ ರಾಷ್ಟ್ರಗಳ ನಡುವೆ ಅಮೇರಿಕಾ ಮಧ್ಯಸ್ಥಿಕೆ ವಹಿಸಿ ಮಾತುಕತೆ ಮೂಲಕ ಬಗೆಹರಿಸುವ ಪ್ರಯತ್ನ ಮಾಡಿದೆ. ಅದು ಸರಿಯಲ್ಲ, ಇದು ಸರಿಯಲ್ಲ ಎನ್ನುವ ಕೀಳು ಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರ ಏನು ನಿರ್ಧಾರ ತಗೆದುಕೊಂಡಿದೆಯೋ ಅದಕ್ಕೆ ನಾವು ಬದ್ದರಾಗಿ ವರ್ತಿಸಬೇಕು. ದೇಶದ ವಿಚಾರ ಬಂದಾಗ ಆಕ್ಷೇಪಾರ್ಹ ಹೇಳಿಕೆಗಳನ್ನು ಕೊಡಬಾರದು ಎಂದು ಹೇಳಿದರು.