ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳು ಪರಿಗಣನೆ: ಉಲ್ಲಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳು ಪರಿಗಣನೆ: ಉಲ್ಲಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳು ಪರಿಗಣನೆ: ಉಲ್ಲಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

ತುಳು ಭಾಷೆಗೆ ಕರ್ನಾಟಕದ ಎರಡನೇ ಭಾಷೆಯ ಮಾನ್ಯತೆಯನ್ನು ನೀಡುವ ಕುರಿತು ಗಂಭೀರ ಪರಿಶೀಲನೆ ನಡೆಸುವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಂಗಳೂರಿನ ಉಲ್ಲಾಳದಲ್ಲಿ ಲವಕುಶ ಜೋಡು ಕಂಬಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಮಂಗಳೂರಿನ ಉಲ್ಲಾಳದಲ್ಲಿ ಲವಕುಶ ಜೋಡು ಕಂಬಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಮಂಗಳೂರು: ಕರ್ನಾಟಕದ ಎರಡನೇ ಭಾಷೆಯಾಗಿ ತುಳುವನ್ನು ಪರಿಗಣಿಸಬೇಕು ಎನ್ನುವ ಬೇಡಿಕೆ ಹಳೆಯದು. ಹಲವಾರು ವರ್ಷಗಳಿಂದಲೂ ಈ ಕುರಿತು ಬೇಡಿಕೆಗಳನ್ನು ಸಲ್ಲಿಸುತ್ತಲೇ ಬರಲಾಗುತ್ತಿದೆ. ಕರಾವಳಿ ಭಾಗ ಮಾತ್ರವಲ್ಲದೇ ಕರ್ನಾಟಕದ ನಾನಾ ಭಾಗಗಳಲ್ಲಿ ನೆಲೆಸಿರುವ ಈ ಭಾಗದ ಜನ ಮಾತನಾಡುವುದು ತುಳುವನ್ನೇ. ಕನ್ನಡದ ನಂತರ ಹೆಚ್ಚು ಜನ ಮಾತನಾಡುವ ಕರ್ನಾಟಕದ ಮತ್ತೊಂದು ಭಾಷೆ ತುಳು. ಈ ಭಾಷೆಯನ್ನು ಕನ್ನಡದ ಬಳಿಕ ಎರಡನೇ ಭಾಷೆಯಾಗಿ ಪರಿಗಣಿಸಬೇಕು ಎನ್ನುವ ಕೂಗು ಮತ್ತೊಮ್ಮೆ ಕೇಳಿ ಬಂದಿದೆ. ಈ ಬೇಡಿಕೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಕೂಡ ಮಾಡಲಾಗುವುದು ಎನ್ನುವ ಉತ್ತರ ಸರ್ಕಾರದ ಕಡೆಯಿಂದಲೂ ಬಂದಿದೆ.

ಮಂಗಳೂರು ಹೊರ ವಲಯದ ಉಲ್ಲಾಳದ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವ ಶನಿವಾರ ಆರಂಭಗೊಂಡಿದ್ದು. ಈ ವೇಳೆ ತುಳು ಭಾಷೆಯ ಬೇಡಿಕೆ ಬಲವಾಗಿಯೇ ಕೇಳಿ ಬಂದಿತು. ವಿಧಾನಸಭೆಯ ಅಧ್ಯಕ್ಷರೂ ಆಗಿರುವ ಮಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಯು.ಟಿ.ಖಾದರ್‌, ತುಳುವನ್ನು ಹೆಚ್ಚು ಜನ ಮಾತನಾಡುವುದರಿಂದ ಅದನ್ನು ಎರಡನೇ ಭಾಷೆಯಾಗಿ ಪರಿಗಣಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು.

ಇದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದು ಭರವಸೆ ನೀಡಿದರು.

ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ . ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎನ್ನುವುದು ಸಿದ್ದರಾಮಯ್ಯ ಅವರ ನುಡಿ.

ಕಂಬಳಕ್ಕೆ ಬಲ

ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ. ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ.24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕಾರ ನೀಡಿದೆ ಎಂದರು ಸಿದ್ದರಾಮಯ್ಯ.

ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ ಎಂದರು.

ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಯು.ಟಿ.ಖಾದರ್ ಅವರು ಸ್ಪೀಕರ್ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ 1000 ಕೋಟಿಯಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅಷ್ಟೊಂದು ಪ್ರೀತಿ ಇದೆ ಖಾದರ್ ಅವರಿಗೆ ಎಂದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್ ಸೇರಿ ಹಲವು ಪ್ರಮುಖರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Whats_app_banner