Tumkur News: ತುಮಕೂರಿನ ಸಿದ್ದಗಂಗಾ ಮಠಕ್ಕೆ ಹರಿದು ಬಂದ ಭಕ್ತ ಸಾಗರ, ಡಾ.ಶಿವಕುಮಾರ ಶ್ರೀಗಳ 6ನೇ ಪುಣ್ಯ ಸ್ಮರಣೆ
ಕನ್ನಡ ಸುದ್ದಿ  /  ಕರ್ನಾಟಕ  /  Tumkur News: ತುಮಕೂರಿನ ಸಿದ್ದಗಂಗಾ ಮಠಕ್ಕೆ ಹರಿದು ಬಂದ ಭಕ್ತ ಸಾಗರ, ಡಾ.ಶಿವಕುಮಾರ ಶ್ರೀಗಳ 6ನೇ ಪುಣ್ಯ ಸ್ಮರಣೆ

Tumkur News: ತುಮಕೂರಿನ ಸಿದ್ದಗಂಗಾ ಮಠಕ್ಕೆ ಹರಿದು ಬಂದ ಭಕ್ತ ಸಾಗರ, ಡಾ.ಶಿವಕುಮಾರ ಶ್ರೀಗಳ 6ನೇ ಪುಣ್ಯ ಸ್ಮರಣೆ

ತುಮಕೂರಿನಲ್ಲಿ ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿ ಅವರ ಆರನೇ ಪುಣ್ಯಸ್ಮರಣೆ ಕಾರ್ಯಕ್ರಮ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.ವರದಿ: ಈಶ್ವರ್‌ ತುಮಕೂರು

ತುಮಕೂರಿನಲ್ಲಿ ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿ ಅವರ ಪುಣ್ಯಸ್ಮರಣೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಚಾಲನೆ ನೀಡಿದರು.
ತುಮಕೂರಿನಲ್ಲಿ ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿ ಅವರ ಪುಣ್ಯಸ್ಮರಣೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಚಾಲನೆ ನೀಡಿದರು.

ತುಮಕೂರು: ತುಮಕೂರಿನಲ್ಲಿ ಎಲ್ಲಿ ನೋಡಿದರೂ ಮಂಗಳವಾರ ಡಾ.ಶಿವಕುಮಾರಸ್ವಾಮೀಜಿ ಅವರ ಸ್ಮರಣೆ. ಸಿದ್ದಗಂಗಾ ಮಠದಲ್ಲಂತೂ ಭಕ್ತಗಣದ ಅಭಿಮಾನದ ನಡುವೆ ಶ್ರೀಗಳಿಗೆ ಗೌರವ ಸಲ್ಲಿಕೆ.ಲೋಕಕಲ್ಯಾಣಕ್ಕಾಗಿ ಧಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಸಿದ್ದಗಂಗೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು. ಪ್ರಮುಖ ಮಠಾಧೀಶರು, ಗಣ್ಯರ ಉಪಸ್ಥಿತಿಯಲ್ಲಿ ಚಟುವಟಿ

ಸಿದ್ದಗಂಗಾ ಕ್ಷೇತ್ರದಲ್ಲಿ ನಡೆದ ಶ್ರೀಗಳ 6ನೇ ಪುಣ್ಯ ಸಂಸ್ಮರಣೋತ್ಸವಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಮೇಘಾಲಯ ರಾಜ್ಯಪಾಲ ಸಿ.ಹೆಚ್. ವಿಜಯಶಂಕರ್, ಕೇಂದ್ರ ಸಚಿವ ವಿ.ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ ಸೇರಿದಂತೆ ವಿವಿಧ ಮಠಾಧೀಶರು, ಹರಗುರು ಚರಮೂರ್ತಿಗಳು ಹಾಗೂ ಸಹಸ್ರಾರು ಭಕ್ತ ಸಮೂಹ ಶ್ರೀಗಳ ಗದ್ದುಗೆ ದರ್ಶನ ಪಡೆದರು.

ಲಿಂ.ಡಾ.ಶಿವಕುಮಾರ ಸ್ವಾಮೀಜಿ ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮಂಗಳವಾರ ನಸುಕಿನಿಂದಲೇ ವಿವಿಧ ಧಾರ್ಮಿಕ ವಿಧಿ ವಿಧಾನ, ವೇದ ಘೋಷ ಮೊಳಗಿದವು.

ಶ್ರೀಗಳ 6ನೇ ಪುಣ್ಯಾರಾಧನೆ ಪ್ರಯುಕ್ತ ಶ್ರೀಗಳು ಐಕ್ಯರಾಗಿರುವ ಶಿವಯೋಗಿ ಮಂದಿರ ಬಗೆ ಬಗೆಯ ಪುಷ್ಪಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿದ್ದು, ಶ್ರೀಗಳ ಗದ್ದುಗೆಯನ್ನು ವಿವಿಧ ಪುಷ್ಪ, ಹಣ್ಣು ಹಂಪಲುಗಳಿಂದ ವಿಶೇಷವಾಗಿ ಸಿಂಗರಿಸಲಾಗಿದ್ದು, ವಿದ್ಯುತ್ ದೀಪಾಲಂಕಾರದೊಂದಿಗೆ ಸಿದ್ದಗಂಗಾ ಮಠ ಕಂಗೊಳಿಸುತ್ತಿತ್ತು.

ಮುಂಜಾನೆಯೇ ಇಷ್ಟಲಿಂಗ ಪೂಜೆ ನೆರವೇರಿಸಿದ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಲಿಂ.ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯಲ್ಲಿ ಪೂಜಾ ವಿಧಾನಗಳಾದ ಮಹಾ ರುದ್ರಾಭಿಷೇಕ, ರಾಜೋಪಚಾರ, ಬಿಲ್ವಾರ್ಚನೆಯೊಂದಿಗೆ ನೆರವೇರಿದವು, ಹಲವು ಮಠಾಧೀಶರು, ಹರಗುರುಚರಮೂರ್ತಿಗಳು ನಸುಕಿನಲ್ಲೆ ಆರಂಭವಾದ ಶ್ರೀಗಳ ಗದ್ದುಗೆ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ಶ್ರೀಗಳ ಭಾವಚಿತ್ರ ಮೆರವಣಿಗೆ

ಶ್ರೀಮಠದ ಆವರಣದಲ್ಲಿ ಸುಮಂಗಲಿಯರು ಹೊತ್ತ 108 ಕಳಸಗಳೊಂದಿಗೆ ರುದ್ರಾಕ್ಷಿ ಮಂಟಪದಲ್ಲಿ ಲಿಂಗೈಕ್ಯ ಶ್ರೀಗಳ ಭಾವಚಿತ್ರ ಮೆರವಣಿಗೆ ವೈಭವಯುತವಾಗಿ ನಡೆಯಿತು.

ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಭಾವಚಿತ್ರ ಮೆರವಣಿಗೆ ಶ್ರೀಗಳ ಗದ್ದುಗೆ ಮಂದಿರದಿಂದ ಆರಂಭವಾಗಿ ವಸ್ತುಪ್ರದರ್ಶನದ ಆವರಣದವರೆಗೆ ಸಾಗಿತು, ಮತ್ತೆ ವಸ್ತು ಪ್ರದರ್ಶನದ ಆವರಣದಿಂದ ಗದ್ದುಗೆ ಮಂದಿರದ ವರೆಗೆ ಮೆರವಣಿಗೆ ಸಾಗಿ ಅಂತ್ಯಗೊಂಡಿತು.

ಶ್ರೀಗಳ ಭಾವಚಿತ್ರ ಮೆರವಣಿಗೆಯಲ್ಲಿ ಕರಡಿ ವಾದ್ಯ, ನಂದಿಧ್ವಜ ಕುಣಿತ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಹಾಗೂ ವಾದ್ಯ ಮೇಳಗಳು ಪಾಲ್ಗೊಂಡು ಮೆರುಗು ನೀಡಿದವು.

6 ಕಡೆ ದಾಸೋಹ

ಶ್ರೀಗಳ 6ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಶ್ರೀಮಠದ 6 ಕಡೆಗಳಲ್ಲಿ ಲಕ್ಷಾಂತರ ಭಕ್ತಾದಿಗಳಿಗಾಗಿ ಬಗೆ ಬಗೆಯ ಖಾದ್ಯಗಳೊಂದಿಗೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ಶ್ರೀಮಠದ ಕೈಗಾರಿಕಾ ವಸ್ತುಪ್ರದರ್ಶನದ ಆವರಣ, ಸಾದರ ಕೊಪ್ಪಲು, ಕೆಂಪಹೊನ್ನಯ್ಯ, ಅತಿಥಿಗೃಹ, ಹೊಸ ಪ್ರಸಾದ ನಿಲಯ, ಹಳೆ ಪ್ರಸಾದ ನಿಲಯ ಸೇರಿದಂತೆ 6 ಕಡೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು, ಬೆಳಗಿನ ಉಪಹಾರ ಉಪ್ಪಿಟ್ಟು, ಕೇಸರಿಬಾತ್, ಮಧ್ಯಾಹ್ನ ಚಿತ್ರಾನ್ನ, ಪಾಯಸ, ಸಿಹಿ ಬೂಂದಿ, ಖಾರ ಬೂಂದಿ, ಅನ್ನಸಾಂಬರ್, ಮಾಲ್ದಿ, ಬೂಂದಿ, ಖಾರ ಬೂಂದಿ, ಮೈಸೂರು ಪಾಕ್ ಸೇರಿದಂತೆ ವಿವಿಧ ಖಾದ್ಯಗಳನ್ನು ಭಕ್ತರು ಸವಿದು ಪುನೀತರಾದರು.

ಶ್ರೀಮಠದಲ್ಲಿ ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಅಡಿಷನಲ್ ಎಸ್ಪಿ ವಿ.ಮರಿಯಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು.

ವರದಿ: ಈಶ್ವರ್‌ ತುಮಕೂರು

Whats_app_banner