Breaking News: ಭಾರೀ ಮಳೆ, ಉಡುಪಿ ಜಿಲ್ಲೆ ಶಾಲಾ, ಕಾಲೇಜುಗಳಿಗೆ ಇಂದು ರಜೆ, ಡಿಸಿ ಆದೇಶ
Udupi News ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಸುರಕ್ಷತಾ ಕ್ರಮವಾಗಿ ಆಗಸ್ಟ್ 1ರ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ 1 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಘೋಷಿಸಿ ಆದೇಶಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿಲ್ಲ. ಈ ಎಲ್ಲಾ ಶಿಕ್ಷಣ ಸಂಸ್ಥೆಗಳು ಎಂದಿನಂತೆ ನಡೆಯುತ್ತವೆ.
ಭಾರಿ ಮಳೆಯಾಗುತ್ತಿರುವ ಕಾರಣ ಉಡುಪಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಬುಧವಾರವೂ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಉಡುಪಿ, ಕಾಪು, ಕಾರ್ಕಳ ಮತ್ತು ಹೆಬ್ರಿ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಆಯಾ ತಾಲ್ಲೂಕುಗಳ ತಹಶೀಲ್ದಾರ್ಗಳು ರಜೆ ಘೋಷಿಸಿದ್ದರು. ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಕೆಲವು ಕಡೆಗಳಲ್ಲಿ ನದಿಗಳು ಉಕ್ಕಿ ಹರಿದು ಪ್ರವಾಹ ಸ್ಥಿತಿಯೂ ಉಂಟಾಗಿದೆ. ಅಲ್ಲದೇ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಜಿಲ್ಲೆಯಲ್ಲಿ ನೀಡಲಾಗಿದೆ.
ವರದಿ: ಹರೀಶ ಮಾಂಬಾಡಿ.ಮಂಗಳೂರು