Eknath Shinde: ಒಂದಿಂಚು ಭೂಮಿಯನ್ನೂ ಬಿಡಲಾರೆವು: 'ಮಹಾ' ಸಿಎಂ ಏಕನಾಥ್ ಶಿಂಧೆ ಗುಡುಗು!
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ರಾಜ್ಯದ ಒಂದಿಂಚು ಭೂಮಿಯನ್ನೂ ಬೇರೆಯವರಿಗೆ ಬಿಟ್ಟು ಕೊಡುವುದಿಲ್ಲ ಎಂದು ಗುಡುಗಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಅವರು, ಗಡಿ ವಿವಾದವನ್ನು ಸುಪ್ರೀಂಕೋರ್ಟ್ನಲ್ಲಿ ಬಗೆಹರಿಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಈ ಕುರಿತಾದ ಮಾಹಿತಿ ಇಲ್ಲಿದೆ.
ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರ ನಾಯಕರು ಒಬ್ಬಾರದ ಮೇಲೊಬ್ಬರು ಸ್ಪರ್ಧೆಗೆ ಬಿದ್ದವರಂತೆ ಹೇಳಿಕೆ ನೀಡುತ್ತಿದ್ದು, ವಿನಾಕಾರಣ ಕರ್ನಾಟಕವನ್ನು ಕೆಣಕುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ರಾಜ್ಯದ ಒಂದಿಂಚು ಭೂಮಿಯನ್ನೂ ಬೇರೆಯವರಿಗೆ ಬಿಟ್ಟು ಕೊಡುವುದಿಲ್ಲ ಎಂದು ಗುಡುಗಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಅವರು, ಗಡಿ ವಿವಾದವನ್ನು ಸುಪ್ರೀಂಕೋರ್ಟ್ನಲ್ಲಿ ಬಗೆಹರಿಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಗತ್ಯ ಹೇಳಿಕೆ ನೀಡಿದ್ದಾರೆ. ನಮ್ಮ ನೆಲವನ್ನು ಯಾವುದೇ ಕಾರಣಕ್ಕೂ ಅನ್ಯರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ವಿವಾದವನ್ನು ಕಾನೂನು ಹೋರಾಟದ ಮೂಲಕವೇ ಜಯಿಸಲಾಗುವುದು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.
ಗಡಿ ವಿವಾದದ ಕುರಿತು ಮಹಾರಾಷ್ಟ್ರದ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿವೆ. ಈ ಕುರಿತು ಯಾರೂ ಕೂಡ ಅನಗತ್ಯ ಹೇಳಿಕೆ ನೀಡದೇ, ಕಾನೂನು ಹೋರಾಟವನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಏಕನಾಥ್ ಶಿಂಧೆ ಮನವಿ ಮಾಡಿದ್ದಾರೆ.
ಗಡಿ ಭಾಗದಲ್ಲಿರುವ ಮರಾಠಿ ಭಾಷಿಕರಿಗೆ ನ್ಯಾಯ ಒದಗಿಸುವುದು ನಮ್ಮ ಪ್ರಥಮ ಕರ್ತವ್ಯ. ಗಡಿ ಭಾಗದ 40 ಹಳ್ಳಿಗಳ ಜನರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಸಿಎಂ ಏಕನಾಥ್ ಶಿಂಧೆ ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.
ಜತ್ ತಾಲೂಕಿಮನ ಬಗ್ಗೆ ಕರ್ನಾಟಕ ಸಿಎಂ ಬೊಮ್ಮಾಯಿ ನೀಡಿರುವ ಹೇಳಿಕೆ ಖಂಡನೀಯ. ಮಹಾರಾಷ್ಟ್ರದ ನೆಲ ಕಬಳಿಸುವ ಕರ್ನಾಟಕದ ಹುನ್ನಾರವನ್ನು ಇದು ಪ್ರದರ್ಶಿಸಿದೆ. ಆದರೆ ಯಾವುದೇ ಕಾರಣಕ್ಕೂ ನಾವು ಮಹಾರಾಷ್ಟ್ರದ ಒಂದಿಂಚು ಭೂಮಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಏಕನಾಥ್ ಶಿಂಧೆ ಹರಿಹಾಯ್ದರು.
ವಿವಾದವನ್ನು ಸುಪ್ರೀಂಕೋರ್ಟ್ನಲ್ಲಿ ಬಗೆಹರಿಸಿಕೊಳ್ಳಬೇಕೆ ವಿನಃ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಅಲ್ಲ. ನಾವು ಈ ಕಾನೂನು ಹೋರಾಟದಲ್ಲಿ ಜಯ ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು.
ಕರ್ನಾಟಕದ ಗಡಿ ಭಾಗಗಳಲ್ಲಿ ನೆಲೆಸಿರುವ ಮರಾಠಿ ಭಾಷಿಕರು ದಶಕಗಳಿಂದ ಅನ್ಯಾಯವನ್ನು ಸಹಿಸಿಕೊಂಡಿದ್ದಾರೆ. ಮರಾಠಿ ಭಾಷಿಕರ ಮೇಲೆ ಕರ್ನಾಟಕದ ದಬ್ಬಾಳಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಏಕನಾಥ್ ಶಿಂಧೆ ಕಿಡಿಕಾರಿದ್ದಾರೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉದ್ಧಟತವನ್ನು ನಿಯಂತ್ರಿಸುವಂತೆ ಕೋರಿ, ನಾವು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲಿದ್ದೇವೆ. ಅನಗತ್ಯ ಹೇಳಿಕೆಗಳನ್ನು ನೀಡದಂತೆ ನಾನು ಕರ್ನಾಟಕದ ನಾಯಕರನ್ನು ಒತ್ತಾಯಿಸುತ್ತೇನೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.
ಇನ್ನು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಜತ್ ಕುರಿತ ಕರ್ನಾಟಕ ಸಿಎಂ ಬೊಮ್ಮಾಯಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಗಳು ಗಡಿ ವಿವಾದದ ಬಗ್ಗೆ ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ. ಮಹಾರಾಷ್ಟ್ರದ 40 ಹಳ್ಳಿಗಳ ಮೇಲೆ ಅವರು ಏಕಾಏಕಿ ಹಕ್ಕು ಚಲಾಯಿಸುತ್ತಿರುವುದು ಖಂಡನೀಯ ಎಂದು ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.
ಎನ್ಸಿಪಿ ನಾಯಕ ಅಜಿತ್ ಪವಾರ್ ಕೂಡ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಬೊಮ್ಮಾಯಿ ಹೇಳಿಕೆಯನ್ನು ಟೀಕಿಸಿದ್ದು, ಅವರನ್ನು ಬಿಟ್ಟರೆ ಮಹಾರಾಷ್ಟ್ರ ರಾಜಧಾನಿ ಮುಂಬೈ ಕೂಡ ನಮ್ಮದೇ ಎಂದು ವಾದಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಪ್ರದೇಶಗಳಾದ ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿಯನ್ನು ಮರಳಿ ಪಡೆಯಲು, ಮಹಾರಾಷ್ಟ್ರ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಬಲ ಹೋರಾಟ ನಡೆಸಲಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದರು.
ಪಡ್ನವೀಸ್ ಹೇಳಿಕೆಯನ್ನು ಟೀಕಿಸಿ ಟ್ವೀಟ್ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದರು.
ವಿಭಾಗ