ಆಪರೇಷನ್ ಸಿಂಧೂರ ಬಗ್ಗೆ ಜಗತ್ತಿಗೆ ಮಾಹಿತಿ ನೀಡಿದ ಮಹಿಳಾ ಅಧಿಕಾರಿ; ಕರ್ನಲ್ ಸೋಫಿಯಾ ಖುರೇಷಿ ಯಾರು?
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ಬುಧವಾರ ನಸುಕಿನ ಜಾವ ದಾಳಿ ಮಾಡಿದೆ. ಈ ಬಗ್ಗೆ ಮಾಧ್ಯಮಗಳಿಗೆ ಕರ್ನಲ್ ಸೋಫಿಯಾ ಖುರೇಷಿ ಮಾಹಿತಿ ನೀಡಿದರು. ಖುರೇಷಿ ಯಾರು?ಇಲ್ಲಿದೆ ಮಾಹಿತಿ.

ನವದೆಹಲಿ: ಆಪರೇಷನ್ ಸಿಂಧೂರ ಮೂಲಕ ಪಹಲ್ಗಾಮ್ ದಾಳಿಗೆ ಭಾರತ ದಿಟ್ಟ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ಬುಧವಾರ ನಸುಕಿನ ಜಾವ ದಾಳಿ ಮಾಡಿದೆ. ಆಪರೇಷನ್ ಸಿಂಧೂರ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ, ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಕರ್ನಲ್ ಸೋಫಿಯಾ ಖುರೇಷಿ ಯಾರು?
ಭಾರತೀಯ ಸೇನೆಯ ಕಾರ್ಫ್ಸ್ ಆಫ್ ಸಿಗ್ನಲ್ಸ್ನ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ, ಏಷ್ಯಾ ಸೇರಿದಂತೆ ಹಲವು ದೇಶಗಳನ್ನೊಳಗೊಂಡ ಬಹುರಾಷ್ಟ್ರೀಯ ಕ್ಷೇತ್ರ ಫೋರ್ಸ್ 18ರಲ್ಲಿ ಭಾರತೀಯ ಸೇನಾ ತರಬೇತಿ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾಗವಹಿಸಿದ ಎಲ್ಲಾ ದೇಶಗಳಲ್ಲಿ ಖುರೇಷಿ ಅವರು ಏಕೈಕ ಮಹಿಳಾ ಕಮಾಂಡರ್ ಆಗಿದ್ದರು. ಇದು ಮಿಲಿಟರಿ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಭಾರತದ ಬದ್ಧತೆಯನ್ನು ಒತ್ತಿ ಹೇಳುತ್ತದೆ.
1990ರಲ್ಲಿ ಸೇನೆಗೆ ನಿಯೋಜಿತರಾದ ಖುರೇಷಿ, ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಗಮನಾರ್ಹ ಅನುಭವ ಹೊಂದಿದ್ದಾರೆ. ಅಲ್ಲದೆ 2006ರಲ್ಲಿ ಕಾಂಗೋದಲ್ಲಿ ಭಾರತೀಯ ಕಾರ್ಯಾಚರಣೆಯ ಭಾಗವಾಗಿದ್ದರು. ಖುರೇಷಿ, ವಿಶ್ವಸಂಸ್ಥೆಯ ಶಾಂತಿಪಾಲನಾ ಪ್ರಯತ್ನಗಳಲ್ಲಿ ಕೂಡ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸವಾಲನ್ನೆದುರಿಸುವ ಭಾರತೀಯ ಮಹಿಳೆಯರು ಸೇನೆಗೆ ಸೇರುವ ಬಗ್ಗೆ ಸ್ಪಷ್ಟ ಸಂದೇಶವನ್ನು ಕೂಡ ಅವರು ರವಾನಿಸಿದ್ದರು.
2016ರಲ್ಲಿ ದಕ್ಷಿಣ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಬಿಪಿನ್ ರಾವತ್ ಕೂಡ ಖುರೇಷಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದರು. ಸೈನ್ಯವು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಸಿಬ್ಬಂದಿಗೆ ಸಮಾನ ಅವಕಾಶ ಮತ್ತು ಜವಾಬ್ದಾರಿಯನ್ನು ಕೊಡುತ್ತದೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆ
ಆಪರೇಷನ್ ಸಿಂಧೂರ ಕಾರ್ಯಾಚರಣೆ ಅಡಿಯಲ್ಲಿ, ಸಶಸ್ತ್ರ ಪಡೆಗಳು ಬುಧವಾರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ಗೆ ಸೇರಿದ ಒಂಭತ್ತು ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಿದವು. 26 ನಾಗರಿಕರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಅತ್ಯಂತ ನಿರ್ಣಾಯಕ ದಾಳಿ ಇದಾಗಿದೆ.
ರಕ್ಷಣಾ ಸಚಿವಾಲಯದ ಪ್ರಕಾರ, ಭಾರತೀಯ ವಾಯುಪಡೆಯು ಪಾಕಿಸ್ತಾನದೊಳಗೆ ನಾಲ್ಕು ಮತ್ತು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಐದು ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿವೆ. ಈ ದಾಳಿ ಯಾವುದೇ ನಾಗರಿಕರನ್ನು ಮತ್ತು ಪಾಕಿಸ್ತಾನಿ ಸೇನಾ ನೆಲೆಗಳನ್ನು ಗುರಿಯಾಗಿಸಿಲ್ಲ. ಬದಲಾಗಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ. ಗಡಿಯಾಚೆಗಿನ ಭಯೋತ್ಪಾದನಾ ದಾಳಿ ತಡೆಗಟ್ಟುವುದು ದಾಳಿಯ ಉದ್ದೇಶ ಎಂದೂ ಭಾರತ ಸ್ಪಷ್ಟಪಡಿಸಿದೆ.